ಪಹಲ್ಗಾಮ್ ದಾಳಿಗೆ ಕುರಿತು ಚರ್ಚೆ ನಡೆಸಲಿಲ್ಲ; ಈಗ ತುರ್ತು ಪರಿಸ್ಥಿತಿಗೆ 50 ವರ್ಷದ ವಿಶೇಷ ಅಧಿವೇಶನ ಏಕೆ ? ಕಾಂಗ್ರೆಸ್ ಪ್ರಶ್ನೆ

Most read

ನವದೆಹಲಿ: ದೇಶದಲ್ಲಿ ತುರ್ತು ಪರಿಸ್ಥಿತಿ ಜಾರಿಯಾಗಿ 50 ವರ್ಷಗಳು ತುಂಬಿದ ಅಂಗವಾಗಿ ಸಂಸತ್ತಿನ ವಿಶೇಷ ಅಧಿವೇಶನ ನಡೆಸಲು ಕೇಂದ್ರ ಸರ್ಕಾರ ಮುಂದಾಗಿದೆ. ಇದು ದೇಶ ಎದುರಿಸುತ್ತಿರುವ ತುರ್ತು ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಉದ್ಧೇಶವಾಗಿದೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ನೈಜ ಹಾಗೂ ತುರ್ತು ಸಮಸ್ಯೆಗಳಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಕಾಶ್ಮೀರದ ಪಹಲ್ಗಾಮ್ ನಲ್ಲಿ ಏಪ್ರಿಲ್ 22ರಂದು ನಡೆದ ಭಯೋತ್ಪಾದಕ ದಾಳಿ ಹಾಗೂ ನಂತರ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಕುರಿತು ಚರ್ಚಿಸಲು ಪ್ರಧಾನಿಯವರ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಕರೆಯಬೇಕೆಂದು ಕಾಂಗ್ರೆಸ್ ಒತ್ತಾಯಿಸಿತ್ತು. ಆದರೆ ಈವರೆಗೆ ಸಭೆ ಕರೆದಿಲ್ಲ. ಸಂಸತ್ ಅಧಿವೇಶನ ಕರೆಯಲು ಎಲ್ಲ ಪ್ರತಿಪಕ್ಷಗಳು ಆಗ್ರಹಪಡಸಿದ್ದವು. ಆಗಲೂ ಕರೆಯಲಿಲ್ಲ. ಈಗ ಕರೆಯುವ ಔಚಿತ್ಯವಾದರೂ ಏನು ಎಂದು ಅವರು ಪ್ರಧಾನಿ ಮೋದಿ ಅವರನ್ನು ಪ್ರಶ್ನಿಸಿದ್ದಾರೆ.

ಈಗ ದೇಶದಲ್ಲಿ ತುರ್ತು ಪರಿಸ್ಥಿತಿ ಜಾರಿಯಾಗಿ 50 ವರ್ಷದ ಅಂಗವಾಗಿ ಜೂನ್ 25-26 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗುವುದು ಎಂಬ ಮಾತುಗಳು ಆಡಳಿತಾರೂಢ ಎನ್ ಟಿಎ ಒಕ್ಕೂಟದಿಂದ ಕೇಳಿಬರುತ್ತಿವೆ. ಇದು ನೈಜ ಮತ್ತು ತುರ್ತು ಸಮಸ್ಯೆಗಳಿಂದ ದೇಶದ ಜನರ ಗಮನವನ್ನು ಬೇರೆಡೆಗೆ ಸೇಳೆಯುವ ಯತ್ನವಾಗಿದೆ ಎಂದು ಜೈರಾಮ್ ಆರೋಪಿಸಿದ್ದಾರೆ.

ಪ್ರಧಾನಿ ಮೋದಿ ನಾಯಕತ್ವದಲ್ಲಿ ದೇಶದಲ್ಲಿ ಕಳೆದ 11 ವರ್ಷಗಳಿಂದ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಲ್ಲಿದೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ. ಪಹಲ್ಗಾಮ್ ನಲ್ಲಿ ದಾಳಿ ನಡೆಸಿದ ಭಯೋತ್ಪಾದಕರು ಇನ್ನೂ ತಲೆಮರೆಸಿಕೊಂಡಿದ್ದು ಅವರನ್ನು ಬಂಧಿಸಿಲ್ಲ ಏಕೆ? ಪಾಕ್ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಅವಕಾಶ ನೀಡಿದ್ದೇಕೆ? 2020ರ ಜೂನ್ 19 ಕ್ಕೆ ಚೀನಾಗೆ ಕ್ಲೀನ್ ಚಿಟ್ ನೀಡಿದ್ದು ಏಕೆ? ಎಂದು ಸರಣಿ ಪ್ರಶ್ನೆಗಳನ್ನು ಕೇಳಿರುವ ಜೈರಾಂ ರಮೇಶ್ ಜ್ವಲಂತ ಸಮಸ್ಯೆಗಳಿಂದ ತಪ್ಪಿಸಿಕೊಳ್ಳುವುದೇ ಪ್ರಧಾನಿ ಉದ್ದೇಶವಾಗಿದೆ ಎಂದು ಆರೋಪಿಸಿದ್ದಾರೆ.

More articles

Latest article