ಚಂಡೀಗಢ: ದೇಶದ ಸೇನೆ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಸೇನೆಯ ಚಲನವಲನಗಳಿಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನಿ ಗುಪ್ತಚರರ ಜತೆ ಹಂಚಿಕೊಂಡ ಆರೋಪದ ಮೇಲೆ ಪಂಜಾಬ್ ನ ತರಣ್ ತರಣ್ ಜಿಲ್ಲೆಯ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಇಂದು ತಿಳಿಸಿದ್ದಾರೆ. ಆರೋಪಿಯನ್ನು ತರಣ್ನ ಮೊಹಲ್ಲಾ ನಿವಾಸಿ ಗಗನ್ದೀಪ್ ಸಿಂಗ್ ಅಲಿಯಾಸ್ ಗಗನ್ ಎಂದು ಗುರುತಿಸಲಾಗಿದೆ
ಪಾಕಿಸ್ತಾನಿ ಗುಪ್ತಚರ ಕಾರ್ಯಕರ್ತರೊಂದಿಗೆ (ಪಿಐಒ) ಮಾಹಿತಿ ಹಂಚಿಕೊಂಡ ಮೊಬೈಲ್ ಫೋನ್ ಅನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಆರೋಪಿಯು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಇಂಟರ್ ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ ಐ) ಜೊತೆ ಸಂಪರ್ಕದಲ್ಲಿದ್ದ ಎಂದು ತಿಳಿದು ಬಂದಿದೆ. ಈ ಸೂಕ್ಷ್ಮ ಮಾಹಿತಿಯನ್ನು ನೀಡಿದ್ದಕ್ಕಾಗಿ ಆತನಿಗೆ ಹಣವನ್ನೂ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತರಣ್ ತರಣ್ ಜಿಲ್ಲಾ ಪೊಲೀಸರು ಮತ್ತು ಪೊಲೀಸರ ಕೌಂಟರ್ ಇಂಟೆಲಿಜೆನ್ಸ್ ವಿಭಾಗದ ಜಂಟಿ ಕಾರ್ಯಾಚರಣೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.
ಪಾಕಿಸ್ತಾನದ ಐಎಸ್ಐ ಮತ್ತು ಪಾಕಿಸ್ತಾನ ಮೂಲದ ಖಾಲಿಸ್ತಾನಿ ಬೆಂಬಲಿಗ ಗೋಪಾಲ್ ಸಿಂಗ್ ಚಾವ್ಹಾ ಅವರೊಂದಿಗೆ ಸಂಪರ್ಕದಲ್ಲಿದ್ದ ಆರೋಪಿಯು ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಯುತ್ತಿದ್ದಾಗ ಸೇನಾ ಚಲನವಲನಗಳನ್ನು ಕುರಿತ ಮಾಹಿತಿಯನ್ನು ಹಂಚಿಕೊಂಡಿದ್ದ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸೇನಾಪಡೆಗಳ ನಿಯೋಜನೆ ಮತ್ತು ಕಾರ್ಯತಂತ್ರದ ಸ್ಥಳಗಳು ಸೇರಿದಂತೆ ರಾಷ್ಟ್ರೀಯ ಭದ್ರತೆಗೆ ಅಪಾಯವನ್ನುಂಟುಮಾಡುವ ವಿವರಗಳನ್ನು ಹಂಚಿಕೊಳ್ಳುತ್ತಿದ್ದ ಎನ್ನುವುದು ತನಿಖೆಯಿಂದ ತಿಳಿದುಬಂದಿದೆ.
ಆರೋಪಿ ಗಗನ್ದೀಪ್ ಕಳೆದ ಐದು ವರ್ಷಗಳಿಂದ ಖಾಲಿಸ್ತಾನಿ ಬೆಂಬಲಿಗ ಗೋಪಾಲ್ ಸಿಂಗ್ ಚಾನ್ಹಾ ಜತೆ ಸಂಪರ್ಕದಲ್ಲಿದ್ದ. ಚಾನ್ಹಾ ಮೂಲಕ ಪಿಐಒಗಳ ಪರಿಚಯವಾಗಿದೆ. ಆತನ ಮೊಬೈಲ್ ಫೋನ್ನಲ್ಲಿ 20ಕ್ಕೂ ಹೆಚ್ಚು ಐ ಎಸ್ ಐ ಸಂಪರ್ಕಗಳ ವಿವರಗಳು ಕಂಡು ಬಂದಿವೆ. ಈ ಸಂಬಂಧ ತರಣ್ ತರಣ್ ನಗರದ ಪೊಲೀಸ್ ಠಾಣೆಯಲ್ಲಿ ಅಧಿಕೃತ ರಹಸ್ಯ ಕಾಯ್ದೆಯಡಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.