ಆಪರೇಷನ್‌ ಸಿಂಧೂರ: ವಿವಿಧ ರಾಷ್ಟ್ರಗಳಿಗೆ ಮಾಹಿತಿ ನೀಡಲು ಸರ್ವಪಕ್ಷಗಳ 7 ನಿಯೋಗ ರಚನೆ

Most read

ನವದೆಹಲಿ: ಕಾಶ್ಮೀರದ ಪಹಲ್ಗಾಮ್‌ ದಾಳಿಗೆ ಆಪರೇಷನ್‌ ಸಿಂಧೂರ ಕಾರ್ಯಾಚರಣೆ ಮೂಲಕ ಪ್ರತೀಕಾರ ತೆಗೆದುಕೊಂಡಿರುವ ಭಾರತದ ಕ್ರಮ ಹಾಗೂ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯ ಸಂಚನ್ನು ವಿಶ್ವದ ವಿವಿಧ ರಾಷ್ಟ್ರಗಳಿಗೆ ಮನವರಿಕೆ ಮಾಡಿಕೊಡಲು ರಾಜತಾಂತ್ರಿಕ ಕಾರ್ಯಾಚರಣೆಯ ಭಾಗವಾಗಿ ವಿವಿಧ ಪಕ್ಷಗಳ ಏಳು ಸಂಸದರ ನೇತೃತ್ವದ ನಿಯೋಗಗಳನ್ನು ಕೇಂದ್ರ ಸರ್ಕಾರ ಆಯ್ಕೆ ಮಾಡಿದೆ. ಈ ಕುರಿತು ಸಂಸದೀಯ ವ್ಯವಹಾರಗಳ ಸಚಿವಾಲಯ ಇಂದು ಪ್ರಕಟಣೆಯನ್ನು ಬಿಡುಗಡೆ ಮಾಡಿದೆ.

ದೇಶದ ರಾಷ್ಟ್ರೀಯ ಒಮ್ಮತ ಹಾಗೂ ಯಾವುದೇ ರೀತಿಯ ಭಯೋತ್ಪಾದನೆಯನ್ನು ನಿರ್ಮೂಲನೆಗೊಳಿಸಲು ಭಾರತದ ದೃಢ ನಿರ್ಧಾರ ಕುರಿತು ಈ ನಿಯೋಗ ಜಗತ್ತಿನ ಹಲವು ರಾಷ್ಟ್ರಗಳಿಗೆ ಮನವರಿಕೆ ಮಾಡಿಕೊಡಲಿದೆ. ಭಯೋತ್ಪಾದನೆ ಕುರಿತು ಭಾರತವು ಶೂನ್ಯ ಸಹಿಷ್ಣುತೆ ಹೊಂದಿದೆ ಎಂಬ ಸತ್ಯವನ್ನೂ ತಿಳಿಸಿಕೊಡಲಿದೆ ಎಂದು ಸಚಿವಾಲಯ ಹೇಳಿದೆ.

ಜಾಗತಿಕ ಮಟ್ಟದಲ್ಲಿ ಭಾರತದ ನಿಲುವನ್ನು ಸ್ಪಷ್ಟ ಧ್ವನಿಯಲ್ಲಿ ತಿಳಿಸುವ ಉದ್ದೇಶದೊಂದಿಗೆ ರಾಜಕೀಯ ಭಿನ್ನಾಭಿಪ್ರಾಯಗಳನ್ನು ಮೀರಿ ನಿಯೋಗದಲ್ಲಿ ಯಾರಿರಬೇಕು ಎಂಬುದರ ಕುರಿತು ಅತ್ಯಂತ ಜಾಗರೂಕತೆಯಿಂದ ಸದಸ್ಯರನ್ನು ಸರ್ಕಾರ ಆಯ್ಕೆ ಮಾಡಿದೆ ಎಂದು ತಿಳಿದು ಬಂದಿದೆ.

ಬಿಜೆಪಿ ಸಂಸದ ರವಿಶಂಕರ ಪ್ರಸಾದ್ ಮತ್ತು ಬೈಜಯಂತ್ ಪಾಂಡಾ, ಕಾಂಗ್ರೆಸ್‌ ಸಂಸದ ಶಶಿ ತರೂರ್, ಜೆಡಿಯು ಸಂಸದ ಸಂಜಯ್ ಜಾ, ಡಿಎಂಕೆ ಸಂಸದೆ ಕನಿಮೋಳಿ, ಎನ್‌ಸಿಪಿ (ಎಸ್‌ ಪಿ ) ಸಂಸದೆ ಸುಪ್ರಿಯಾ ಸುಳೆ, ಶಿವಸೇನಾ ಸಂಸದ ಶ್ರೀಕಾಂತ್ ಶಿಂದೆ ಈ ನಿಯೋಗಗಳನ್ನು ಮುನ್ನಡೆಸಲಿದ್ದಾರೆ.

ಏಳು ಸದಸ್ಯರಲ್ಲಿ ನಾಲ್ವರು ಸಂಸದರು ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟಕ್ಕೆ (ಎನ್‌ಡಿಎ) ಸೇರಿದವರರಾಗಿದ್ದರೆ ಮೂವರು ವಿರೋಧಪಕ್ಷಗಳ ಇಂಡಿಯಾ ಒಕ್ಕೂಟಕ್ಕೆ ಸೇರಿದ್ದಾರೆ. ಪ್ರತಿ ನಿಯೋಗವು ತಲಾ ಐದು ರಾಷ್ಟ್ರಗಳಿಗೆ ಭೇಟಿ ನೀಡಲಿದೆ. ನಿಯೋಗದಲ್ಲಿ ಆಯಾ ರಾಷ್ಟ್ರಗಳಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಅಧಿಕಾರಿಗಳೂ ಇರಲಿದ್ದಾರೆ ಎಂದು ವಿದೇಶಾಂಗ ಇಲಾಖೆ ಮೂಲಗಳು ತಿಳಿಸಿವೆ.

ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರೂ ಎಕ್ಸ್‌ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಆಪರೇಷನ್ ಸಿಂಧೂರ ಕಾರ್ಯಾಚರಣೆ ಮತ್ತು ಗಡಿಯಲ್ಲಿನ ಭಯೋತ್ಪಾದನೆ ವಿರುದ್ಧದ ಹೋರಾಟ ಕುರಿತು ಸರ್ವಪಕ್ಷಗಳ ಏಳು ನಿಯೋಗಗಳು ಪ್ರಮುಖ ಮಿತ್ರ ರಾಷ್ಟ್ರಗಳಿಗೆ ಭೇಟಿ ನೀಡಲಿವೆ. ಜತೆಗೆ ವಿಶ್ವಸಂಸ್ಥೆಯ ಭದ್ರತಾ ಸಮಿತಿಯ ಸದಸ್ಯ ರಾಷ್ಟ್ರಗಳನ್ನೂ ಭೇಟಿ ಮಾಡಿ ಭಾರತದ ನಿಲುವನ್ನು ತಿಳಿಸಿಕೊಡಲಿವೆ ಎಂದಿದ್ದಾರೆ.

More articles

Latest article