ನವದೆಹಲಿ: ಲೋಕಸಭೆ ಪ್ರತಿಪಕ್ಷದ ನಾಯಕನಾಗಿ ಸದನದಲ್ಲಿ ಮಾತನಾಡುವುದು ನನ್ನ ಹಕ್ಕು. ಆದರೆ ನನಗೆ ಅವಕಾಶವನ್ನೇ ನೀಡುತ್ತಿಲ್ಲ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.
ಇಂದಿನಿಂದ ಮುಂಗಾರು ಅಧಿವೇಶನದ ಆರಂಭವಾಗಿದ್ದು, ವಿರೋಧಪಕ್ಷಗಳು ಪ್ರತಿಭಟನೆ ನಡೆಸಿದ ಕಾರಣಕ್ಕೆ ಮೊದಲ ದಿನವೇ ಎರಡನೇ ಬಾರಿ ಕಲಾಪ ಮುಂದೂಡಲಾಗಿತ್ತು.
ನಂತರ ರಾಹುಲ್ ಮಾಧ್ಯಮಗಳ ಜತೆ ಮಾತನಾಡಿದ ಅವರು ಪಹಲ್ಗಾಮ್ ನಲ್ಲಿ ನಡೆದ ದಾಳಿ, ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಭಾರತೀಯ ಸೇನಾ ಪಡೆಗಳು ನಡೆಸಿದ ‘ಆಪರೇಷನ್ ಸಿಂಧೂರ’ ಹಾಗೂ ನಂತರದ ಬೆಳವಣಿಗೆಗಳನ್ನು ಕುರಿತು ಚರ್ಚೆ ನಡೆಸಬೇಕು ಎಂದು ಆಗ್ರಹಿಸಿ ವಿರೋಧ ಪಕ್ಷಗಳು ಲೋಕಸಭೆಯಲ್ಲಿ ಪ್ರತಿಭಟನೆ ನಡೆಸಿದವು. ಇದರಿಂದ ಗದ್ದಲ ಉಂಟಾದ ಕಾರಣ ಕಲಾಪವನ್ನು ಮುಂದೂಡಲಾಗಿತ್ತು.
ರಕ್ಷಣಾ ಸಚಿವ ಹಾಗೂ ಬಿಜೆಪಿಯವರಿಗೆ ಮಾತ್ರ ಮಾತನಾಡಲು ಅವಕಾಶ ನೀಡಲಾಯಿತು. ಆದರೆ, ವಿರೋಧ ಪಕ್ಷಗಳ ನಾಯಕರು ಮಾತನಾಡಲು ಮುಂದಾದರೆ ಅವಕಾಶ ನಿರಾಕರಿಸಲಾಯಿತು ಎಂದು ಆಪಾದಿಸಿದರು. ನಾನು ವಿರೋಧಪಕ್ಷದ ನಾಯಕ. ಸದನದಲ್ಲಿ ಮಾತನಾಡುವುದು ನನ್ನ ಹಕ್ಕು. ಆದರೆ, ಅವಕಾಶವನ್ನೇ ನೀಡಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸದನ ಆರಂಭವಾದ ಕೆಲವೇ ಕ್ಷಣಗಳಲ್ಲಿ ಪ್ರಧಾನಿ ಮೋದಿ ಸದನದಿಂದ ಓಡಿಹೋದರು ಎಂದು ರಾಹುಲ್ ಗಾಂಧಿ ವ್ಯಂಗ್ಯವಾಡಿದ್ದಾರೆ.