ದಾವಣಗೆರೆ : ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ನಾಮಪತ್ರ ಸಲ್ಲಿಕೆ ವೇಳೆ ಹಾಜರಿದ್ದು ಶುಭ ಕೋರಿದರು. ಬಳಿಕ ಮಾಧ್ಯಮದವರ ಜೊತೆ ಮಾತನಾಡಿದರು.
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪನವರು 6 ಬಾರಿ ಶಾಸಕರಾಗಿದ್ದು, ಅವರ ಮಗ ಸಚಿವರಾದ ಎಸ್ . ಎಸ್.ಮಲ್ಲಿಕಾರ್ಜುನ್ ರವರು 2 ಬಾರಿ ಶಾಸಕರಾಗಿ ಜನರಿಂದ ಆಯ್ಕೆಯಾಗಿದ್ದಾರೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಬಲವಾಗಿದೆ. ಶಾಮನೂರು ಶಿವಶಂಕರಪ್ಪ ನವರು ಮಂತ್ರಿ, ಸಂಸದರಾಗಿ, ಶಾಸಕರಾಗಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು, ಜನಮನದಲ್ಲಿ ನೆಲೆಸಿದ್ದಾರೆ. ಕಾಂಗ್ರೆಸ್ ನಲ್ಲಿ ನಾಯಕರಾಗಿದ್ದವರು ಮೃತರಾದರೆ, ಅವರ ಕುಟುಂಬದವರಿಗೆ ಟಿಕೆಟ್ ನೀಡುವ ಪ್ರತೀತಿಯನ್ನು ಪಕ್ಷ ಬೆಳೆಸಿಕೊಂಡು ಬಂದಿದೆ. ಆದ್ದರಿಂದ ಸಮರ್ಥ ಶಾಮನೂರು ರವರಿಗೆ ಟಿಕೆಟ್ ನೀಡಲಾಗಿದೆ. ಈ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಮರ್ಥ ಶಾಮನೂರು ಅವರು ನಾಮಪತ್ರ ಸಲ್ಲಿಕೆಯಲ್ಲಿ ಇತರರೊಂದಿಗೆ ಭಾಗಿಯಾಗಿದ್ದೇನೆ ಎಂದು ತಿಳಿಸಿದರು.
ದಾವಣಗೆರೆ ಜಿಲ್ಲೆಯು ಗ್ಯಾರಂಟಿಗಳ ಜಾರಿಯಲ್ಲಿ ನಂ.1 : ಕಾಂಗ್ರೆಸ್ ವಿವಿಧ ಜಾತಿಧರ್ಮ ವರ್ಗಗಳ ಎಲ್ಲರನ್ನೊಳಗೊಂಡ ಪಕ್ಷ . ಮಹಿಳೆಯರು, ರೈತರು, ಹಿಂದು, ಅಲ್ಪಸಂಖ್ಯಾತರು, ಕಾರ್ಮಿಕರ ಒಳಗೊಂಡ ಪಕ್ಷವಾಗಿದ್ದು, ಎಲ್ಲರನ್ನೊಳಗೊಂಡಿರುವ ಅಭಿವೃದ್ಧಿಯಲ್ಲಿ ನಂಬಿಕೆಯಿಟ್ಟಿರುವ ಪಕ್ಷ. ನುಡಿದಂತೆ ನಡೆದು, ಜನರಿಗೆ ನೀಡಲಾದ ಭರವಸೆಗಳನ್ನು ಈಡೇರಿಸಿರುವ ಪಕ್ಷ. ಕಳೆದ ಬಾರಿ ನೀಡಲಾಗಿದ್ದ ಎಲ್ಲ ಭರವಸೆಗಳನ್ನು ಮೂರು ವರ್ಷಗಳಲ್ಲಿ ಭಾಗಶ: ಪೂರೈಸಲಾಗಿದೆ. ಬಜೆಟ್ ನ್ನು ಅವಲೋಕಿಸಿದರೆ ನುಡಿದಂತೆ ನಡೆಯುವ ನಮ್ಮ ಮಾತನ್ನು ನಿರೂಪಿಸಲಾಗಿದೆ., ದಾವಣಗೆರೆ ಜಿಲ್ಲೆಯು ಗ್ಯಾರಂಟಿಗಳ ಜಾರಿಯಲ್ಲಿ ನಂ.1 ಆಗಿದೆ ಎಂದರು.
ಈ ಗೆಲುವು 2028ರ ಕಾಂಗ್ರೆಸ್ ಗೆಲುವಿಗೆ ದಿಕ್ಸೂಚಿ : ಈ ಉಪಚುನಾವಣೆಗಳು 2028ರ ಬಿಜೆಪಿ ಗೆಲುವಿನ ದಿಕ್ಸೂಚಿ ಎಂಬ ಬಿಜೆಪಿಯವರು ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಈ ಹಿಂದೆಯೂ ಉಪಚುನಾವಣೆಗಳು ನಡೆದಿದ್ದು, ಅದರಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರ ಮಗ ನಿಖಿಲ್ ಕುಮಾರಸ್ವಾಮಿ ಚೆನ್ನಪಟ್ಟಣದಲ್ಲಿ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಮಗ ಶಿಗ್ಗಾಂವಿ ಉಪಚುನಾವಣೆಯಲ್ಲಿ ಸೋಲನುಭವಿಸಿದ್ದಾರೆ. ಅಂತೆಯೇ ಈ ಬಾರಿಯೂ ಕಾಂಗ್ರೆಸ್ ಪಕ್ಷವೇ ಗೆಲುವು ಸಾಧಿಸಲಿದ್ದು, ಈ ಗೆಲುವು 2028ರ ಕಾಂಗ್ರೆಸ್ ಗೆಲುವಿಗೆ ದಿಕ್ಸೂಚಿಯಾಗಿದೆ ಎಂದರು.
ಕಾಂಗ್ರೆಸ್ ನಲ್ಲಿ ಕುಟುಂಬ ರಾಜಕಾರಣವಿಲ್ಲ : ಕಾಂಗ್ರೆಸ್ ಪಕ್ಷ ಕುಟುಂಬ ರಾಜಕಾರಣವನ್ನು ಪ್ರೋತ್ಸಾಹಿಸುತ್ತಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಕಾಂಗ್ರೆಸ್ ಪಕ್ಷ ಕುಟುಂಬ ರಾಜಕಾರಣವನ್ನು ಪ್ರೋತ್ಸಾಹಿಸುವುದಿಲ್ಲ. ಪಕ್ಷದ ಕಾರ್ಯಕರ್ತರು ಸರ್ವಸಮ್ಮತವಾಗಿ ಆಯ್ಕೆ ಮಾಡುವ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗಿದೆ. ಬಂಡಾಯ ಅಭ್ಯರ್ಥಿಯಾಗಿರುವ ಸಾದಿಕ್ ಪೈಲ್ವಾನ್ ರವರು ಕಾಂಗ್ರೆಸ್ ಪಕ್ಷದವರೇ ಆಗಿದ್ದು, ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಾಗುವುದು ಎಂದರು

