ಪ್ರಜ್ವಲ್‌ ರೇವಣ್ಣ ಅತ್ಯಾಚಾರ ಪ್ರಕರಣ: ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Most read

ಬೆಂಗಳೂರು: ಮನೆ ಕೆಲಸ ಮಾಡಲು ಆಗಮಿಸುತ್ತಿದ್ದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದ ವಿಚಾರಣೆ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ವಿಚಾರಣೆಯು ನಿಧಾನವಾಗಿ ಸಾಗುತ್ತಿದ್ದು, ಪ್ರಕರಣದ ಆರೋಪಿಯಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಜಾಮೀನು ನೀಡಬೇಕು ಎಂದು ಅವರ ಪರ ವಕೀಲರು ಹೈಕೋರ್ಟ್‌ ನಲ್ಲಿ ವಾದ ಮಂಡಿಸಿದ್ದಾರೆ.

ಜಾಮೀನು ನೀಡುವಂತೆ ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಆರ್.ಕೃಷ್ಣ ಕುಮಾರ್ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ವಿಚಾರಣೆ ಸಂದರ್ಭದಲ್ಲಿ ಪ್ರಜ್ವಲ್ ಪರ ಹಿರಿಯ ವಕೀಲ ಪ್ರಭುಲಿಂಗ ಕೆ.ನಾವದಗಿ, ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ದೂರಿಗೆ ಸಂಬಂಧಿಸಿದಂತೆ ಈಗಾಗಲೇ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಆದರೆ, ಪ್ರಕರಣದ ವಿಚಾರಣೆ ಒಂದಿಂಚೂ ಮುಂದೆ ಸಾಗಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು.

ಇದೇ ಪ್ರಕರಣಕ್ಕೆ ಸಂಬಂಧಿಸಿದ ಜಾಮೀನು ಅರ್ಜಿಯನ್ನು ಹೈಕೋರ್ಟ್‌ ಸಮನ್ವಯ ಪೀಠ ವಜಾಗೊಳಿಸಿದೆ. ಆದರೆ, ಇದೇ ಪ್ರಕರಣದಲ್ಲಿ ಆರೋಪಿಯಾಗಿರುವ ಶಾಸಕ ಎಚ್.ಡಿ.ರೇವಣ್ಣ ವಿರುದ್ಧದ ವಿಚಾರಣಾ ನ್ಯಾಯಾಲಯದ ನ್ಯಾಯಿಕ ಪ್ರಕ್ರಿಯೆಗೆ ತಡೆ ನೀಡಲಾಗಿದೆ ಎಂಬ ಅಂಶವನ್ನೂ ನ್ಯಾಯಪೀಠದ ಗಮನಕ್ಕೆ ತಂದರು.

ಸರ್ಕಾರದ ಪರ ಹಾಜರಿದ್ದ ಪ್ರಕರಣದ ವಿಶೇಷ ಪ್ರಾಸಿಕ್ಯೂಟರ್, ಹಿರಿಯ ವಕೀಲ ರವಿವರ್ಮ ಕುಮಾ‌ರ್, ಅರ್ಜಿದಾರರ ವಿರುದ್ಧ ಒಟ್ಟು 5 ಪ್ರಕರಣ ದಾಖಲಾಗಿವೆ. ಇವುಗಳಲ್ಲಿ ಒಟ್ಟು 156 ಸಾಕ್ಷಿಗಳಿದ್ದು, ಈಗಾಗಲೇ 30 ಸಾಕ್ಷಿಗಳ ವಿಚಾರಣೆ ನಡೆದಿದೆ. ಒಂದು ಪ್ರಕರಣದಲ್ಲಿನ ಸಾಕ್ಷ್ಯ ವಿಚಾರಣೆ ಅಂತಿಮ ಹಂತದಲ್ಲಿದೆ. ಇನ್ನೆರಡು ಪ್ರಕರಣಗಳ ವಿಚಾರಣೆಯೂ ಆರಂಭವಾಗಿದೆ. ಒಂದು ವೇಳೆ ಜಾಮೀನು ನೀಡಿದರೆ ಅರ್ಜಿದಾರರು ಮತ್ತು ಅವರ ಕಟುಂಬದ ಸದಸ್ಯರು ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಆದ್ದರಿಂದ ಜಾಮೀನು ನೀಡಬಾರದು ಎಂದು ವಾದಿಸಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ ವಿಚಾರಣೆಯನ್ನು ಇದೇ 27ಕ್ಕೆ ಮುಂದೂಡಿತು.

More articles

Latest article