ಹುಬ್ಬಳ್ಳಿ: ಪುಷ್ಕರಣಿ ಜಾಗದ ವಿವಾದಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಇಂದು ಬೃಹತ್ ಪ್ರತಿಭಟನೆಗೆ ಹಿಂದುತ್ವ ಸಂಘಟನೆಗಳು ಕರೆ ನೀಡಿವೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, 1,500ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ವರದಿಯಾಗಿದೆ.
ಹಳೇ ಹುಬ್ಬಳ್ಳಿಯ ಆಸಾರ ಓಣಿಯಲ್ಲಿರುವ ಶ್ರೀ ಭವಾನಿಶಂಕರ ದೇವಸ್ಥಾನದ ಪುಷ್ಕರಣಿ ಜಾಗಕ್ಕೆ ಸಂಬಂಧಿಸಿದಂತೆ ವಿವಾದ ಉಂಟಾಗಿದೆ. ಪುಷ್ಕರಣಿ ಜಾಗದಲ್ಲಿ ರಸ್ತೆ ನಿರ್ಮಾಣ ಮಾಡಿರುವುದನ್ನು ಪುಷ್ಕರಣಿ ಸಂರಕ್ಷಣಾ ಸಮಿತಿ ಹಾಗೂ ಹಿಂದುತ್ವ ಸಂಘಟನೆಗಳು ವಿರೋಧಿಸುತ್ತಿವೆ. ಜಾಗದಲ್ಲಿನ ರಸ್ತೆ ಕಾಮಗಾರಿಯನ್ನು ತೆರವುಗೊಳಿಸುವಂತೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಹಾಗೂ ಪುರಾತತ್ವ ಇಲಾಖೆಗೆ ಮನವಿ ಸಲ್ಲಿಸಲಾಗಿತ್ತು.
ಆದರೆ ಮನವಿ ಸಲ್ಲಿಸಿದ ಬಳಿಕವೂ ಪೊಲೀಸ್ ಭದ್ರತೆಯಲ್ಲಿ ರಸ್ತೆ ಕಾಮಗಾರಿ ಮುಂದುವರಿದಿದೆ ಎಂದು ಸಂಘಟನೆಗಳು ಆರೋಪಿಸಿವೆ. ಈ ಹಿನ್ನೆಲೆಯಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಸಲು ಕರೆ ನೀಡಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಟ್ಟುನಿಟ್ಟಿನ ಭದ್ರತಾ ಕ್ರಮ ಕೈಗೊಂಡಿದ್ದಾರೆ.
ಪ್ರತಿಭಟನೆಯ ಹಿನ್ನೆಲೆಯಲ್ಲಿ ಪ್ರಮುಖ ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ವಹಿಸಿದೆ. ಪುಷ್ಕರಣಿ ಜಾಗದ ವಿವಾದಕ್ಕೆ ಸಂಬಂಧಿಸಿದಂತೆ ಇಂದು ನಡೆಯಲಿರುವ ಪ್ರತಿಭಟನೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

