ಬೆಂಗಳೂರು: ಕಳೆದ ಎರಡು ಮೂರು ವಾರಗಳಿಂದ ಬಿಸಿಲ ಬೇಗೆಯಿಂದ ಬೆಂದಿದ್ದ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಇಂದು ಮಳೆಯಾಗಿದೆ. ಹೆಬ್ಬಾಳ, ಸಂಜಯನಗರ, ಭೂಪಸಂದ್ರ ಮತ್ತು ಮೇಖ್ರಿ ಸರ್ಕಲ್ ಸುತ್ತಮುತ್ತ ಉತ್ತಮ ಮಳೆಯಾಗಿದ್ದು ಹಲವೆಡೆ ಆಲಿಕಲ್ಲು ಸಹಿತ ಧಾರಾಕಾರ ಮಳೆ ಆಗಿದೆ. ಹೀಗಾಗಿ ವಾಹನ ಸವಾರರು ಹಾಗೂ ಸಾರ್ವಜನಿಕರು ಮಳೆಯಲ್ಲಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಯಲಹಂಕ ಸುತ್ತಮುತ್ತ ಧಾರಾಕಾರ ಮಳೆ ಆಗಿದೆ. ಅಕಾಲಿಕ ಮಳೆಯಿಂದಾಗಿ ಸಾರ್ವಜನಿಕರು ಪರದಾಡಿದರು. ಯಲಹಂಕದ ಅಟ್ಟೂರು ಬಡಾವಣೆಯಲ್ಲಿ ರಸ್ತೆ ಬದಿಯಲ್ಲಿ ಮಳೆ ನೀರು ಹರಿಯುತ್ತಿದೆ. ವಾಹನ ಸವಾರರು ಪರದಾಡಬೇಕಾಯಿತು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲೂ ಗುಡುಗು ಸಹಿತ ಮಳೆಯಾಗಿದೆ. ಅರ್ಧಗಂಟೆ ಸುರಿದ ಮಳೆಗೆ ವಾತಾವರಣ ತಂಪಾಗಿದೆ. ವರ್ಷದ ಮೊದಲ ಮಳೆಗೆ ಜನತೆ ಹರ್ಷ ವ್ಯಕ್ತಪಡಿಸಿದ್ದಾರೆ.
ಕೋಲಾರ ನಗರ, ಶ್ರೀನಿವಾಸಪುರ, ಸೇರಿದಂತೆ ಹಲವು ಕಡೆ ಮಳೆಯಾಗಿರುವ ವರದಿಯಾಗಿದೆ. ಮಳೆರಾಯನ ಆಗಮನದಿಂದ ಜನರಲ್ಲಿ ಸಂತಸ ಮೂಡಿದೆ. ಕಳೆದರೆಡು ದಿನಗಳಿಂದ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಮಳೆಯಾಗುತ್ತಿದ್ದು, ಜಾನುವಾರಗಳಿಗೆ ಕುಡಿಯುವ ನೀರು ಮತ್ತು ಮೇವಿಗೆ ಸಹಕಾರಿಯಾಗಿದೆ. ಹಾಸನ ಜಿಲ್ಲೆಯ ಬೇಲೂರು ತಾಲೂಕು ಸೇರಿದಂತೆ ಜಿಲ್ಲೆಯ ವಿವಿಧೆಡೆ ಮಳೆ ಅಬ್ಬರಿಸಿದೆ. ಬೇಲೂರಿನಲ್ಲಿ ಅರ್ಧಗಂಟೆ ಆಲಿಕಲ್ಲು ಸಹಿತ ಮಳೆ ಸುರಿದಿದೆ. ಆ ಮೂಲಕ ಬಿಸಿಲಿನ ಬೇಗೆಯಿಂದ ಹೈರಾಣಾಗಿದ್ದ ರೈತರು, ಕಾಫಿ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ.