ಜೈಪುರ: ರಾಜಸ್ಥಾನದ ಟೊಂಕ್ ಜಿಲ್ಲೆಯ ಬನಾಸ್ ನದಿಯಲ್ಲಿ ಮುಳುಗಿ ಎಂಟು ಮಂದಿ ಪ್ರವಾಸಿಗರು ಮೃತಪಟ್ಟಿದ್ದಾರೆ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ.
25ರಿಂದ 30 ವರ್ಷ ವರ್ಷದೊಳಗಿನ 11 ಮಂದಿ ಯುವಕರು ಸ್ನಾನ ಮಾಡಲು ನದಿಗೆ ಇಳಿದಿದ್ದರು. ಈ ಸಂದರ್ಭದಲ್ಲಿ 8 ಮಂದಿ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ ಎಂದು ಟೊಂಕ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕಾಸ್ ಸಂಗ್ವಾನ್ ಹೇಳಿದ್ದಾರೆ. ಇತರ ಮೂವರನ್ನು ರಕ್ಷಿಸಲಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರೆಲ್ಲರೂ ಜೈಪುರದಿಂದ ಪ್ರವಾಸಕ್ಕೆ ಬಂದಿದ್ದರು ಎಂದು ಅವರು ಮಾಹಿತಿ ನೀಡಿದ್ದಾರೆ.
ನದಿಯಲ್ಲಿ ಮುಳುಗಿ 8 ಮಂದಿ ಪ್ರವಾಸಿಗರು ಮೃತಪಟ್ಟಿರುವ ಸುದ್ದಿ ಅತೀವ ದುಃಖವನ್ನುಂಟು ಮಾಡಿದೆ. ಅಗತ್ಯ ಕ್ರಮ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಭಜನ್ಲಾಲ್ ಶರ್ಮಾ ತಿಳಿಸಿದ್ದಾರೆ.