ಬೆಂಗಳೂರು: ಚಿನ್ನಸ್ಡಾಮಿ ಕ್ರೀಡಾಂಗಣದಲ್ಲಿ ಆರ್ ಸಿ ಬಿ ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದ ವಸ್ತುಸ್ಥಿತಿ ವರದಿಯನ್ನು ಇದೇ 12ರಂದು ಮುಚ್ಚಿದ ಲಕೋಟೆಯಲ್ಲಿ ನೇರವಾಗಿ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಈ ದುರಂತ ಘಟನೆಗೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ ರಾವ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಇಂದು ವಿಚಾರಣೆ ನಡೆಸಿತು.
ವಿಚಾರಣೆ ಆರಂಭವಾಗುತ್ತಿದ್ದಂತೆ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ, ವಾದಿಸಿ, ನಮ್ಮ ಪ್ರತಿಕ್ರಿಯೆಯನ್ನು ಇಂದು ಸಲ್ಲಿಸಲು ಸಾಧ್ಯವಾಗಿಲ್ಲ. ಈ ಪ್ರಕರಣ ಕುರಿತು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹ ನೇತೃತ್ವದಲ್ಲಿ ವಿಚಾರಣಾ ಆಯೋಗವನ್ನು ರಚಿಸಲಾಗಿದೆ. ಇದರ ವರದಿ ಸಲ್ಲಿಕೆಗೆ ಒಂದು ತಿಂಗಳ ಗಡುವು ನೀಡಲಾಗಿದೆ. ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್ ಆಯುಕ್ತರೂ ಸೇರಿದಂತೆ ಐವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದರು.
ಈ ಮಧ್ಯೆ, ಹೈಕೋರ್ಟ್ ನ ಸಮನ್ವಯ ಪೀಠದಲ್ಲಿ ಆರ್ ಸಿ ಬಿ ಮತ್ತು ಡಿ ಎನ್ ಎ ಅಧಿಕಾರಿಗಳ ಜಾಮೀನು ಅರ್ಜಿಗಳು ವಿಚಾರಣೆಗೆ ಬಾಕಿ ಇವೆ. ಒಂದು ವೇಳೆ ಘನ ನ್ಯಾಯಾಲಯದ ಮುಂದೆ ಇಂದೇ ಸರ್ಕಾರ ತೆಗೆದುಕೊಳ್ಳಿರುವ ನಿರ್ಧಾರಗಳನ್ನು ತಿಳಿಸಿದ್ದೇ ಆದಲ್ಲಿ ಅದರ ಅಂಶಗಳನ್ನು ಅರ್ಜಿದಾರರು ತಮ್ಮ ಅನುಕೂಲಕ್ಕೆ ಬಳಕೆ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂದೂ ಕಳವಳ ವ್ಯಕ್ತಪಡಿಸಿದರು.
ಈ ವಾದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಅಂದರೆ ನ್ಯಾಯಾಲಯ ನಿರ್ದೇಶನ ನೀಡಿದರೂ ನೀವು ಪ್ರತಿಕ್ರಿಯೆ ಸಲ್ಲಿಸುವುದಿಲ್ಲವೇ ಎಂದು ಪ್ರಶ್ನಿಸಿತು. ಆಗ ಶಶಿಕಿರಣ ಶೆಟ್ಟಿ, ಅವರು, ಅದು ಹಾಗಲ್ಲ ಸ್ವಾಮಿ, ಇದರಲ್ಲಿ ಕೆಲವು ಮುಖ್ಯ ವಿಚಾರಗಳು ಅಡಕವಾಗಿವೆ. ಮುಕ್ತ ನ್ಯಾಯಾಲಯದಲ್ಲಿ ಎಲ್ಲವನ್ನೂ ಹೇಳುವುದರಿಂದ ಪೂರ್ವಗ್ರಹ ಭಾವನೆ ಉಂಟಾಗಲಿದೆ. ಸರ್ಕಾರ ಪಕ್ಷಪಾತಿಯಾಗಿದೆ ಎಂದು ಯಾರೂ ಭಾವಿಸುವಂತಾಗಬಾರದು. ಒಂದು ತಿಂಗಳಲ್ಲಿ ಸ್ವತಂತ್ರ ವಿಚಾರಣಾ ಆಯೋಗದಿಂದ ವರದಿ ಬರಲಿದೆ. ಜತೆಗೆ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲಾಗಿದೆ. ದಯಮಾಡಿ, ಈ ಅರ್ಜಿಯ ವಿಚಾರಣೆಯನ್ನು ನಾಳೆಗೆ ಮುಂದೂಡಬೇಕು ಎಂದು ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಹಿರಿಯ ವಕೀಲ ಕೆ.ದಿವಾಕರ್ ಅವರು, ವಿಧಾನ ಪರಿಷತ್ ಮಾಜಿ ಸದಸ್ಯ ಮೋಹನ ಕುಮಾರ್ ಕೊಂಡಜ್ಜಿ ಅವರು ಈ ಅರ್ಜಿಯಲ್ಲಿ ಮಧ್ಯಂತರ ಅರ್ಜಿದಾರರಾಗಿ ಸೇರ್ಪಡೆಯಾಗಲು ಅನುಮತಿ ಕೋರುತ್ತಿದ್ದಾರೆ ಎಂದು ತಿಳಿಸಿದರು. ಮತ್ತೊಬ್ಬ ಹಿರಿಯ ವಕೀಲ ಎಸ್.ಎಸ್. ನಾಗಾನಂದ ಅವರು, ಪ್ರಕರಣದ ಸಂತ್ರಸ್ತರೂ ತಮ್ಮ ವಾದ ಮಂಡಿಸಲು ಬಯಸಿದ್ದಾರೆ ಎಂಬ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತಂದರು. ಮತ್ತೂ ಒಬ್ಬ ವಕೀಲ ಆರ್.ಹೇಮಂತ ರಾಜ್, ಈ ಪ್ರಕರಣದಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯೇ (ಕೆಎಸ್ ಸಿಎ) ನಿಜವಾದ ಆರೋಪಿಯಾಗಿದೆ. ಆರ್ ಸಿಬಿಯನ್ನೂ ಪಕ್ಷಗಾರರನ್ನಾಗಿ ಮಾಡಬೇಕು. ಅವರಿಗೂ ನೋಟಿಸ್ ಜಾರಿಗೊಳಿಸಲು ಆದೇಶಿಸಬೇಕು ಎಂದು ಕೋರಿಕೊಂಡರು.
ಎಲ್ಲರ ಮನವಿಗಳನ್ನು ಆಲಿಸಿದ ನ್ಯಾಯಮೂರ್ತಿಗಳು, ಈ ಪಿಐಎಲ್ ನಲ್ಲಿ ಮಧ್ಯಪ್ರವೇಶ ಬಯಸಿರುವ ಅರ್ಜಿಗಳ ಸಂಬಂಧ ಈಗಲೇ ಏನನ್ನೂ ಹೇಳುವುದಿಲ್ಲ. ಸರ್ಕಾರ ತನ್ನ ಪ್ರತಿಕ್ರಿಯೆಯನ್ನು ಮುಚ್ಚಿದ ಲಕೋಟೆಯಲ್ಲಿ ಇದೇ 12ರಂದು ನೇರವಾಗಿ ನ್ಯಾಯಪೀಠಕ್ಕೆ ಸಲ್ಲಿಸಲಿ. ಆನಂತರ ಮಧ್ಯಂತರ ಸೇರ್ಪಡೆ ಅರ್ಜಿಗಳನ್ನು ಪರಿಶೀಲನೆ ಮಾಡಲಾಗುವುದು ಎಂದು ತಿಳಿಸಿ ವಿಚಾರಣೆಯನ್ನು ಇದೇ 12ಕ್ಕೆ ಮುಂದೂಡಿದರು.