ಬೆಂಗಳೂರು: ಈ ಬಾರಿಯ ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ ಸಿಬಿ) ಚಾಂಪಿಯನ್ ಆಗಿ ಹೊರಹೊಮ್ಮಿದ ಹಿನ್ನೆಲೆಯಲ್ಲಿ ನಿನ್ನೆ ಹಮ್ಮಿಕೊಂಡ ಸಂಭ್ರಮಾಚರಣೆಯಲ್ಲಿ 11 ಮಂದಿ ಜೀವ ತೆತ್ತಿದ್ದರು. ಈ ದುರಂತಕ್ಕೆ ಸಂಬಂದಿಸಿದಂತೆ ಪೊಲೀಸರು ಆರ್ ಸಿ ಬಿ ಮ್ಯಾನೇಜ್ಮೆಂಟ್ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದಾರೆ. ಈ ಮೊದಲು ಘಟನೆ ಸಂಬಂಧ ಅಸ್ವಾಭಾವಿಕ ಸಾವು (ಯುಡಿಆರ್) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಕ್ಕೆ ಸರ್ಕಾರದ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡ ಪೊಲೀಸರು, ಆರ್ ಸಿ ಬಿ ಮ್ಯಾನೇಜ್ಮೆಂಟ್, ಡಿ ಎನ್ ಎ ಇವೆಂಟ್ ಮ್ಯಾನೇಜ್ ಮೆಂಟ್ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಆಸೋಸಿಯೇಷನ್ (ಕೆಎಸ್ ಸಿಎ) ವಿರುದ್ಧ ಎಫ್ ಐ ಆರ್ ದಾಖಲಿಸಿದ್ದಾರೆ.
ಎ-1 ಆರ್ಸಿಬಿ ಮ್ಯಾನೇಜ್ಮೆಂಟ್, ಡಿಎನ್ಎ ಇವೆಂಟ್ ಮ್ಯಾನೇಜ್ಮೆಂಟ್ ಎ-2 ಆಗಿದ್ದರೆ ಕೆಎಸ್ಸಿಎ (ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಅನ್ನು 3ನೇ ಆರೋಪಿಯನ್ನಾಗಿ ಮಾಡಲಾಗಿದೆ. ಬಿ ಎನ್ ಎಸ್ ಸೆ. 105, 115, 118ರಡಿ ಮೊಕದ್ದಮೆ ದಾಖಲಾಗಿದೆ. ಕಬ್ಬನ್ ಪಾರ್ಕ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದ್ದು ಪ್ರಕರಣವನ್ನು ಸಿಐಡಿಗೆ ವರ್ಗಾಯಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಕಾಲ್ತುಳಿತ ಕುರಿತು ಇದೇ ಮೊದಲ ಬಾರಿಗೆ ಪ್ರತಕ್ರಿಯಿಸಿರುವ ಐಪಿಎಲ್ ಅಧಿಕಾರಿಗಳು ಆಟಗಾರರು ಮತ್ತು ಅಧಿಕಾರಿಗಳಿಗೆ ಕ್ರೀಡಾಂಗಣದ ಹೊರಗಿನ ವಿಚಾರ ತಿಳಿದಿರಲಿಲ್ಲ ಎಂದು ಹೇಳಿದೆ.
ಮಂಗಳವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರೋಚಕ ಗೆಲುವು ಸಾಧಿಸಿತು. ಆ ಮೂಲಕ ಬರೊಬ್ಬರಿ 18 ವರ್ಷಗಳ ಬಳಿಕ ಆರ್ ಸಿಬಿ ಮತ್ತು ವಿರಾಟ್ ಕೊಹ್ಲಿ ತಮ್ಮ ಚೊಚ್ಚಲ ಐಪಿಎಲ್ ಟ್ರೋಫಿ ಎತ್ತಿಹಿಡಿದಿದ್ದರು.
ಇದೇ ಕಾರಣಕ್ಕೆ ಆರ್ ಸಿಬಿ ಆಟಗಾರರನ್ನು ಕರ್ನಾಟಕ ಸರ್ಕಾರ ಇಂದು ಸಂಜೆ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಸನ್ಮಾನಿಸಿತ್ತು. ಬಳಿಕ ತಂಡ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭಿಮಾನಿಗಳ ಜೊತೆ ಸಂಭ್ರಮಾಚರಣೆ ಮಾಡಿತು. ಈ ಕಾರ್ಯಕ್ರಮಕ್ಕೂ ಮೊದಲು ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಅಭಿಮಾನಿಗಳು ಕ್ರೀಡಾಂಗಣ ಪ್ರವೇಶಿಸುವಾಗ ಕಾಲ್ತುಳಿತ ಸಂಭವಿಸಿ ಕನಿಷ್ಠ 11 ಮಂದಿ ಸಾವನ್ನಪ್ಪಿ, ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಐಪಿಎಲ್ ಮುಖ್ಯಸ್ಥ ಅರುಣ್ ಧುಮಾಲ್ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಒಳಗಿದ್ದ ಅಧಿಕಾರಿಗಳಿಗೆ ಮೈದಾನದ ಹೊರಗೆ ಏನಾಯಿತು ಎಂದು ತಿಳಿದಿರಲಿಲ್ಲ ಎಂದು ಹೇಳಿದ್ದಾರೆ. ಇದು ತುಂಬಾ ದುಃಖಕರ ಮತ್ತು ದೊಡ್ಡ ದುರಂತ. ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ವಿಜಯೋತ್ಸವ ಕುರಿತು ನಮಗೆ ಮಾಹಿತಿ ಇರಲಿಲ್ಲ. ಏಕೆಂದರೆ ಟೂರ್ನಿ ಮುಗಿದ ಕೆಲವೇ ಗಂಟೆಗಳಲ್ಲಿ ವಿಜಯೋತ್ಸವವನ್ನು ಆಯೋಜಿಸಿದ್ದು ಯಾರು ಎಂದು ತಿಳಿದಿಲ್ಲ ಎಂದಿದ್ದಾರೆ.