ಆರ್‌ ಸಿಬಿ ಸಂಭ್ರಮಾಚರಣೆ; ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ 11 ಮಂದಿ  ಸಾವು: 15ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Most read

ಬೆಂಗಳೂರು:  ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆಗಿ ಹೊರಹೊಮ್ಮಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ (ಆರ್‌ ಸಿಬಿ) ಆಟಗಾರರು ಬೆಂಗಳೂರು ನಗರದಲ್ಲಿ ಸಂಭ್ರಮಿಸುತ್ತಿದ್ದಾರೆ. ನಗರದ ಹೃದಯಭಾಗದಲ್ಲಿರುವ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿದ್ದು ಅಪಾರ ಸಂಖ್ಯೆಯಲ್ಲಿ ಆರ್‌ ಸಿಬಿ ಅಭಿಮಾನಿಗಳು ನೆರೆದಿದ್ದಾರೆ. ಈ ಸಂದರ್ಭದಲ್ಲಿ  ಕಾಲ್ತುಳಿತಕ್ಕೆ ಸಿಲುಕಿ  6-10 ಮಂದಿ  ಮೃತಪಟ್ಟಿದ್ದಾರೆ. ಎನ್ನಲಾಗುತ್ತಿದೆ. ಆದರೆ ಸಾವಿನ  ಸಂಖ್ಯೆ ನಿಖರವಾಗಿ ತಿಳಿದು ಬಂದಿಲ್ಲ.

ಕಾಲ್ತುಳಿತದಲ್ಲಿ 15ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದು, ಐವರ ಸ್ಥಿತಿ ಗಂಭೀರವಾಗಿದೆ. ಅಸ್ವಸ್ಥಗೊಂಡವರನ್ನು ಶಿವಾಜಿನಗರದಲ್ಲಿರುವ ಬೌರಿಂಗ್ ಮತ್ತು ​ಲೇಡಿ ಕರ್ಜನ್ ಆಸ್ಪತ್ರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ 10 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಓರ್ವ ಮಹಿಳೆ ಸೇರಿ ಐವರು ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ. ಬೌರಿಂಗ್​ ಆಸ್ಪತ್ರೆ ಎದುರು ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ಕ್ರೀಡಾಂಗಣ ಸುತ್ತಮುತ್ತ ಆರ್‌ ಸಿಬಿ ಸಮುದ್ರವೇ ಸೇರಿದ ಎನ್ನಬಹುದು. ಹಾಗಾಗಿ ಆ ಮಾರ್ಗದಲ್ಲಿ ಸಂಚರಿಸುವ ವಾಹನಗಳು ಚಲಿಸಲಾಗದೆ ಟ್ರಾಫಿಕ್ ಜಾಮ್ ಉಂಟಾಗಿದೆ. ಜನರನ್ನು ಕಂಟ್ರೋಲ್ ಮಾಡಲು ಸಾಧ್ಯವಾಗದೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ನೂಕುನುಗ್ಗಲಿನಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರನ್ನು ಪೊಲೀಸರು ತಮ್ಮ  ವಾಹನಗಳಲ್ಲೇ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ. ಗೇಟ್ ನಂಬರ್ 12ರಲ್ಲಿ ಓರ್ವ ಮಹಿಳೆಯೊಬ್ಬರು ಕುಸಿದುಬಿದ್ದಿದ್ದು ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಬ್ಯಾರಿಕೇಡ್​ ಮುರಿದುಬಿದ್ದು ಮೂವರ ಕಾಲು ಮುರಿದಿದೆ ಎಂದು ತಿಳಿದು ಬಂದಿದೆ.

ಈ ದುರಂತದಲ್ಲಿ ಎಷ್ಟು ಮಂದಿ ಮೃತಪಟ್ಟಿದ್ದಾರೆ ಎನ್ನುವುದು ನಿಖರವಾಗಿ ತಿಳಿದು ಬಂದಿಲ್ಲ. ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದ್ದ ಇಬ್ಬರು ಹಾಗೂ ವೈದೇಹಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದ್ದ ಇಬ್ಬರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಘಟನೆಯಲ್ಲಿ 15 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿದೆ.

More articles

Latest article