ಚೆನ್ನೈ: ಜನಸಂಖ್ಯೆ ಆಧಾರದ ಮೇಲೆ ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡನೆ ಮಾಡುವುದು ರಾಜ್ಯಗಳನ್ನು ದುರ್ಬಲಗೊಳಿಸುವ ಯತ್ನವೇ ಆಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮತ್ತೊಮ್ಮೆ ಆರೋಪಿಸಿದ್ದಾರೆ.
ಈ ನಿಟ್ಟಿನಲ್ಲಿ ಜಂಟಿ ಕ್ರಿಯಾ ಸಮಿತಿಯ (ಜೆಎಸಿ) ಮೊದಲ ಸಭೆ ಶನಿವಾರ ನಡೆಯಲಿದ್ದು, ಇದು ದೇಶದ ಭವಿಷ್ಯ ರೂಪಿಸಲಿರುವ ಆರಂಭಿಕ ಚಳವಳಿಯಾಗಲಿದೆ ಎಂದು ಅವರು ವಿಡಿಯೊ ಸಂದೇಶದ ಮೂಲಕ ತಿಳಿಸಿದ್ದಾರೆ.
ಜನಸಂಖ್ಯೆ ಬೆಳವಣಿಗೆಯನ್ನು ಸಮರ್ಥವಾಗಿ ನಿಯಂತ್ರಿಸುವ ಮೂಲಕ ರಾಷ್ಟ್ರದ ಅಭಿವೃದ್ಧಿಗೆ ಗಣನೀಯ ಕೊಡುಗೆ ನೀಡಿದ ರಾಜ್ಯಗಳನ್ನು ಕೇಂದ್ರ ಸರ್ಕಾರ ಶಿಕ್ಷಿಸಬಾರದು ಎಂದು ಅವರು ಹೇಳಿದ್ದಾರೆ.
ಇಂದಿನ ಸಭೆಯಲ್ಲಿ ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್, ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಭಾಗಿಯಾಗಲಿದ್ದಾರೆ. ಈ ಸಭೆಯಲ್ಲಿ ಮುಂದಿನ ನಿರ್ಧಾರದ ಕುರಿತು ರೂಪುರೇಷೆ ರೂಪಿಸಲಾಗುವುದು. ಸಭೆ ತೆಗೆದುಕೊಳ್ಳುವ ನಿರ್ಧಾರದ ಪ್ರಕಾರ ನಾವು ಮುಂದಿನ ಕ್ರಮ ಕೈಗೊಳ್ಳಲಿದ್ದೇವೆ. ನ್ಯಾಯಯುತವಾದ ನಮ್ಮ ಬೇಡಿಕೆಗೆ ಜಯ ಸಿಗಲಿದೆ. ನಮ್ಮ ಈ ಹೋರಾಟವು ಭಾರತವನ್ನು ರಕ್ಷಿಸಲಿದೆ ಎಂದು ಸ್ಟಾಲಿನ್ ಹೇಳಿದ್ದಾರೆ.