ಸೆಲ್ಫಿ ಹುಚ್ಚು: ಪೊಟರೆಗೆ ಜಾರಿಬಿದ್ದ ವಿದ್ಯಾರ್ಥಿನಿ ರಕ್ಷಣೆ

Most read

ತುಮಕೂರು: ತುಮಕೂರು ತಾಲೂಕಿನ ಮೈದಾಳ ಕೆರೆ ಕೋಡಿ ನೀರಿನಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಕೊಚ್ಚಿ ಹೋಗಿದ್ದ ವಿದ್ಯಾರ್ಥಿನಿ ಜೀವಂತವಾಗಿ ಪತ್ತೆಯಾಗಿ ಅಚ್ಚರಿ ಮೂಡಿಸಿದ್ದಾರೆ. ಈ ವಿದ್ಯಾರ್ಥಿನಿ ಸಾವನ್ನೇ ಗೆದ್ದು ಬಂದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತವಾಗಿದೆ.

ಇಲ್ಲಿನ ಎಸ್‌ಐಟಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಗುಬ್ಬಿ ತಾಲ್ಲೂಕಿನ ಶಿವರಾಂಪುರ ನಿವಾಸಿ 19 ವರ್ಷದ ಹಂಸ ಎಂಬ ಯುವತಿಯೇ ಸಾವನ್ನು ಗೆದ್ದು ಬಂದಿರುವ ವಿದ್ಯಾರ್ಥಿನಿ. ಈಕೆ ಗೆಳತಿಯರ ಜೊತೆ ಮಂದಾರಗಿರಿ ಬೆಟ್ಟ ನೋಡಲು ಹೋಗಿದ್ದರು. ಸಮೀಪದಲ್ಲಿದ್ದ ಮೈದಾಳ ಕೆರೆ ಕೋಡಿ ನೋಡಲು ಹೋಗಿದ್ದಾರೆ. ನೀರು ಹರಿಯುವುದರ ಹಿನ್ನೆಲೆಯಲ್ಲಿ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಆ ಸಂದರ್ಭದಲ್ಲಿ ಕಾಲು ಜಾರಿ ಬಿದ್ದು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುದ್ದಿ ತಿಳಿದ ಕೂಡಲೇ ಕ್ಯಾತ್ಸಂದ್ರ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ವಿದ್ಯಾರ್ಥಿನಿಗಾಗಿ ತೀವ್ರ ಕಾರ್ಯಾಚರಣೆ ನಡೆಸಿದ್ದರು. ಆದರೆ ಭಾನುವಾರ ರಾತ್ರಿಯಾದರೂ ಪತ್ತೆಯಾಗಿರಲಿಲ್ಲ. ಸೋಮವಾರ ಬೆಳಗ್ಗೆ ಮತ್ತೆ ರಕ್ಷಣಾ ಕಾರ್ಯವನ್ನು ಅಗ್ನಿ ಶಾಮಕ ದಳದ ಸಿಬ್ಬಂದಿ ಕೈಗೊಂಡಾಗ ಕಲ್ಲಿನ ಪೊಟರೆಯಲ್ಲಿ ವಿದ್ಯಾರ್ಥಿನಿ ಸಿಲುಕಿಕೊಂಡಿರುವುದು ಪತ್ತೆಯಾಗಿತ್ತು. ವಿದ್ಯಾರ್ಥಿನಿ ಅಸ್ವಸ್ಥಳಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸತತ 12 ಗಂಟೆಗಳ ಕಾಲ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುವ ಮೂಲಕ ವಿದ್ಯಾರ್ಥಿನಿ ಹಂಸರನ್ನು ಜೀವಂತವಾಗಿ ರಕ್ಷಿಸಿದ್ದಾರೆ. ಅಗ್ನಿಶಾಮಕ ದಳದ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯವೈಖರಿಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತವಾಗಿದೆ.

ಭಾನುವಾರ ಸಂಜೆ ಕೋಡಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ಹಂಸ ಇಡೀ ರಾತ್ರಿ ಕಲ್ಲಿನ ಪೊಟರೆಯಲ್ಲಿ ಕಾಲ ಕಳೆದಿದ್ದು, ಪವಾಡ ಎಂಬಂತೆ ಬದುಕುಳಿದ್ದಾರೆ.

More articles

Latest article