ಬೆಂಗಳೂರು: ಜಾತಿ, ವರ್ಗ ಅಥವಾ ಧರ್ಮದ ಆಧಾರದ ಮೇಲೆ ಯಾವುದೇ ವಿದ್ಯಾರ್ಥಿ ತಾರತಮ್ಯ ಎದುರಿಸಬಾರದು ಎನ್ನುವುದನ್ನು ಖಾತ್ರಿ ಪಡಿಸಲು ‘ರೋಹಿತ್ ವೇಮುಲ ಕಾಯ್ದೆ’ ಹೆಸರಿನ ಕಾನೂನನ್ನು ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಭರವಸೆ ನೀಡಿದ್ದಾರೆ.
ರಾಹುಲ್ ಗಾಂಧಿ ಅವರು ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು. ಇದನ್ನು ಖಾತ್ರಿಪಡಿಸುವುದಕ್ಕಾಗಿ ‘ರೋಹಿತ್ ವೇಮುಲ ಕಾಯ್ದೆ’ ಹೆಸರಿನ ಕಾನೂನನ್ನು ಕರ್ನಾಟಕದಲ್ಲೂ ರೂಪಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿ ಏಪ್ರಿಲ್ 16 ರಂದು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದರು.
ಈ ಪತ್ರಕ್ಕೆ ಎಕ್ಸ್ ಮೂಲಕ ಪ್ರತಿಕ್ರಿಯಿಸಿರುವ ಸಿಎಂ ಅವರು, ಇಂತಹ ಸಂಕಲ್ಪಕ್ಕೆ ಸರ್ಕಾರ ಬದ್ಧ ಮತ್ತು ದೃಢ ಎಂದು ಹೇಳಿದ್ದಾರೆ.ರೋಹಿತ್, ಪಾಯಲ್, ದರ್ಶನ್ ಮತ್ತು ಘನತೆಗೆ ಅರ್ಹರಾದ ಅಸಂಖ್ಯಾತರ ಕನಸುಗಳನ್ನು ಗೌರವಿಸಲು ಕಾನೂನನ್ನು ಆದಷ್ಟು ಶೀಘ್ರ ಸಿದ್ಧಪಡಿಸಲಾಗುವುದು. ಬಿ.ಆರ್. ಅಂಬೇಡ್ಕರ್ ಅವರ ಸಮಾನ, ಸಹಾನುಭೂತಿಯ ಭಾರತದ ದೃಷ್ಟಿಕೋನವನ್ನು ಸಾಕಾರಗೊಳಿಸುವತ್ತ ದಿಟ್ಟ ಹೆಜ್ಜೆ ಇಡಲಾಗುವುದು. ಆದಷ್ಟು ಬೇಗ ಈ ಕಾನೂನನ್ನು ಜಾರಿಗೆ ತರಲಾಗುವುದು ಎಂದಿದ್ದಾರೆ.
ಬಿ.ಆರ್. ಅಂಬೇಡ್ಕರ್ ತಮ್ಮ ಜೀವಿತಾವಧಿಯಲ್ಲಿ ಎದುರಿಸಿದ್ದ ತಾರತಮ್ಯಕ್ಕೆ ಸಂಬಂಧಿಸಿದ ಹಲವು ಘಟನೆಗಳನ್ನು ರಾಹುಲ್ ಗಾಂಧಿ ಪತ್ರದಲ್ಲಿ ನೆನಪಿಸಿಕೊಂಡಿದ್ದರು.