ಬೆಂಗಳೂರು: ಗ್ರಾಹಕರ ಜತೆ ಕನ್ನಡ ಮಾತನಾಡಲು ನಿರಾಕರಿಸಿದ ಬೆಂಗಳೂರಿನ ಚಂದಾಪುರ ಸೂರ್ಯಸಿಟಿಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ) ಶಾಖೆಯ ಮಹಿಳಾ ಮ್ಯಾನೇಜರ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ.
ಈ ಮಧ್ಯೆ ಕನ್ನಡಪರ ಸಂಘಟನೆಗಳ ಆಗ್ರಹಕ್ಕೆ ಮಣಿದ ಎಸ್ ಬಿಐ ಮುಖ್ಯ ಕಚೇರಿ ಜನರಲ್ ಮ್ಯಾನೇಜರ್ ಸುಶೀಲ್ ಕುಮಾರ್ ಅವರು ಬ್ಯಾಂಕ್ ಮ್ಯಾನೇಜರ್ ಅವರನ್ನು ವರ್ಗಾವಣೆ ಮಾಡಿದ್ದಾರೆ.
ಕನ್ನಡ ಮತ್ತು ಇಂಗ್ಲಿಷ್ನಲ್ಲಿ ಮಾತನಾಡಲು ನಿರಾಕರಿಸಿ ನಾಗರಿಕರನ್ನು ಕಡೆಗಣಿಸಿರುವ ಆನೇಕಲ್ ತಾಲ್ಲೂಕಿನ ಸೂರ್ಯಸಿಟಿಯ ಎಸ್ಬಿಐ ಶಾಖಾ ವ್ಯವಸ್ಥಾಪಕರ ವರ್ತನೆ ತೀವ್ರ ಖಂಡನೀಯ ಎಂದು ಸಿದ್ದರಾಮಯ್ಯ ‘ಎಕ್ಸ್’ ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ದುರ್ವತನೆ ತೋರಿದ ಅಧಿಕಾರಿಯನ್ನು ವರ್ಗಾವಣೆ ಮಾಡುವಲ್ಲಿ ಎಸ್ ಬಿಐ ತೆಗದುಕೊಂಡಿರುವ ಕ್ರಮವನ್ನು ನಾವು ಪ್ರಶಂಸಿಸುತ್ತೇವೆ. ಆದರೂ ಇಂತಹ ಘಟನೆಗಳು ಮರುಕಳಿಸಬಾರದು. ಎಲ್ಲಾ ಬ್ಯಾಂಕ್ ಉದ್ಯೋಗಿಗಳು ಗ್ರಾಹಕರನ್ನು ಘನತೆಯಿಂದ ನಡೆಸಿಕೊಳ್ಳಬೇಕು ಮತ್ತು ಸ್ಥಳೀಯ ಭಾಷೆಯಲ್ಲಿ ಸಂವಹನ ನಡೆಸುವುದನ್ನು ಕಲಿಯಬೇಕು ಎಂದು ಹೇಳಿದ್ದಾರೆ. ದೇಶಾದ್ಯಂತ ಎಲ್ಲಾ ಬ್ಯಾಂಕ್ ಸಿಬ್ಬಂದಿಗೆ ಸಾಂಸ್ಕೃತಿಕ ಮತ್ತು ಭಾಷಾ ಸಂವೇದನಾ ತರಬೇತಿಯನ್ನು ಕಡ್ಡಾಯಗೊಳಿಸಬೇಕೆಂದು ನಾನು ಹಣಕಾಸು ಸಚಿವಾಲಯ ಮತ್ತು ಹಣಕಾಸು ಸೇವೆಗಳ ಇಲಾಖೆಯನ್ನು ಒತ್ತಾಯಿಸುತ್ತೇನೆ. ಸ್ಥಳೀಯ ಭಾಷೆಯನ್ನು ಗೌರವಿಸುವುದು ಎಂದರೆ ಜನರನ್ನು ಗೌರವಿಸುವುದೇ ಆಗಿರುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಏನಿದು ಪ್ರಕರಣ?
ಕನ್ನಡದಲ್ಲಿ ವ್ಯವಹರಿಸುವ ವಿಷಯಕ್ಕೆ ಸಂಬಂಧಪಟ್ಟಂತೆ ಚಂದಾಪುರ ಸೂರ್ಯಸಿಟಿಯಲ್ಲಿರುವ ಎಸ್ ಬಿ ಐ ಶಾಖೆಯ ಮಹಿಳಾ ಮ್ಯಾನೇಜರ್ ಮತ್ತು ಕರ್ನಾಟಕ ರಾಷ್ಟ್ರಸಮಿತಿ ಪಕ್ಷದ (ಕೆ ಆರ್ ಎಸ್) ಪಕ್ಷದ ಮುಖಂಡ ಮಹೇಶ್ ನಡುವೆ ಮಂಗಳವಾರ ಮಾತಿನ ಚಕಮಕಿ ನಡೆದಿತ್ತು. ಸಮಯ ಬೆಳಗ್ಗೆ 10.30 ಆಗಿದ್ದರೂ ಸಿಬ್ಬಂದಿ ಏಕೆ ಕೆಲಸ ಮಾಡುತ್ತಿಲ್ಲ ಎಂದು ಪ್ರಶ್ನಿಸಿದ್ದರು. ನಂತರ ತೀವ್ರ ಮಾತಿನ ಚಕಮಕಿ ನಡೆದಿತ್ತು.
ಮಾತನಾಡುವಾಗ ಬ್ಯಾಂಕ್ ಮ್ಯಾನೇಜರ್ ಹಿಂದಿಯಲ್ಲಿ ಮಾತನಾಡಲು ಆರಂಭಿಸಿದ್ದರು. ಆಗ ಮಹೇಶ್, ಕನ್ನಡದಲ್ಲಿ ಮಾತನಾಡುವಂತೆ ಒತ್ತಾಯಿಸಿದಾಗ ಕಡ್ಡಾಯವಾಗಿ ಕನ್ನಡದಲ್ಲಿ ಮಾತನಾಡಬೇಕು ಎಂದು ಎಲ್ಲಿಯೂ ಹೇಳಿಲ್ಲ. ಕನ್ನಡ ಮಾತನಾಡುವುದಿಲ್ಲ ಎಂದು ಮ್ಯಾನೇಜರ್ ಮೊಂಡುವಾದ ಮಂಡಿಸಿದ್ದರು.
ಇದು ಕರ್ನಾಟಕ ರಾಜ್ಯವಾಗಿದ್ದು, ಕನ್ನಡ ಮಾತನಾಡಬೇಕು ಎಂದು ಮಹೇಶ್ ಹೇಳಿದ್ದಾರೆ. ಆಗ ಮ್ಯಾನೇಜರ್, ಇದು ಭಾರತ, ಕನ್ನಡ ಮಾತನಾಡುವುದಿಲ್ಲ ಎಂದು ಹೇಳಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮಹಿಳಾ ಮ್ಯಾನೇಜರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ.
ಆಯಾ ರಾಜ್ಯಗಳಲ್ಲಿ ಸ್ಥಳೀಯ ಭಾಷೆ ಮಾತನಾಡುವಂತೆ ಆರ್ ಬಿಐ ಕಾನೂನು ರೂಪಿಸಿದೆ. ಹಾಗಾಗಿ ಬ್ಯಾಂಕ್ ಸಿಬ್ಬಂದಿ ಕಡ್ಡಾಯವಾಗಿ ಕನ್ನಡ ಮಾತನಾಡಬೇಕು. ಆದರೆ ಚಂದಾಪುರ ಎಸ್ ಬಿಐ ಶಾಖೆಯ ಮ್ಯಾನೇಜರ್ ಕನ್ನಡ ಮಾತನಾಡುವುದಿಲ್ಲ ಎಂದು ಹೇಳಿರುವುದು ಖಂಡನೀಯ ಮಹೇಶ್ ತಕರಾರು ಎತ್ತಿದ್ದಾರೆ. ನಂತರ ಬ್ಯಾಂಕ್ ಮ್ಯಾನೇಜರ್ ಕನ್ನಡದಲ್ಲಿ ಕ್ಷಮೆ ಕೋರಿದ್ದರು. ಆದರೆ ಇದು ಕಾಟಾಚಾರದ ಕ್ಷಮೆ ಎಂದು ಕನ್ನಡ ಪರ ಹೋರಾಟಗಾರರು ಆಕ್ಷೇಪ ವ್ಯಕ್ತಪಡಿಸಿದ್ದರು.