ಬೆಂಗಳೂರಿನಲ್ಲಿ ಇನ್ನು ಮುಂದೆ ಕಾಲ್ನಡಿಗೆಯಲ್ಲಿ ಪೊಲೀಸರ ಗಸ್ತು: ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್

Most read

ಬೆಂಗಳೂರು: ಬೆಂಗಳೂರು ನಗರದಲ್ಲಿ ಬೆಳಗ್ಗೆ ಮತ್ತು ಸಂಜೆ ವೇಳೆಯಲ್ಲಿ ಪೊಲೀಸರು ಕಾಲ್ನಡಿಗೆ ಮೂಲಕ ಗಸ್ತು ಕರ್ತವ್ಯ ನಿರ್ವಹಿಸಬೇಕು ಎಂದು ನಗರ ಪೊಲೀಸ್‌ ಆಯುಕ್ತ ಸೀಮಂತ್‌ಕುಮಾರ್‌ ಸಿಂಗ್‌ ಸೂಚನೆ ನೀಡಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರ ನಂಬಿಕೆಯನ್ನು ಬಲಪಡಿಸಲು ಮತ್ತು ಪೊಲೀಸ್‌ ಉಪಸ್ಥಿತಿಯನ್ನು ಹೆಚ್ಚಿಸಲು ಬೀಟ್‌, ಹೊಯ್ಸಳ, ಚೀತಾ ವಾಹನದ ಸಿಬ್ಬಂದಿ ಜತೆಗೆ ಸಬ್‌ ಇನ್‌ ಸ್ಪೆಕ್ಟರ್‌ ಶ್ರೇಣಿಯ ಅಧಿಕಾರಿಗಳು ತಮ್ಮ ತಮ್ಮ ಠಾಣೆಗಳ ವ್ಯಾಪ್ತಿಗಳಲ್ಲಿ ಕಾಲ್ನಡಿಗೆ ಮುಖಾಂತರ ಗಸ್ತು ಕರ್ತವ್ಯ ನಿರ್ವಹಿಸಲು ಈಗಾಗಲೇ ಸೂಚಿಸಿದ್ದೇನೆ ಎಂದು ಅವರು ಹೇಳಿದರು.

ಅಪರಾಧ ಹಾಗೂ ರೌಡಿ ಚಟುವಟಿಕೆಗಳನ್ನು ಹತ್ತಿಕ್ಕಲು ಈ ಹೊಸ ಯೋಜನೆಯನ್ನು ಪ್ರಾಯೋಗಿಕವಾಗಿ ಪೂರ್ವ ಮತ್ತು ಪಶ್ಚಿಮ ವಿಭಾಗಗಳಲ್ಲಿ ಜಾರಿಗೆ ತರಲಾಗಿದ್ದು, ಈ ವ್ಯವಸ್ಥೆಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಅವರು ತಿಳಿಸಿದರು.

ಚೀತಾ ಹಾಗೂ ಹೊಯ್ಸಳ ವಾಹನಗಳಲ್ಲಿ ಸಿಬ್ಬಂದಿ ಗಸ್ತು ಮಾಡುತ್ತಿರುತ್ತಾರೆ. ಆದರೆ ಅವರು ಸ್ಥಳದಲ್ಲಿ ಖುದ್ದು ಹಾಜರಿದ್ದು, ಸೂಕ್ಮ ಪ್ರದೇಶಗಳು ಹಾಗೂ ವೃತ್ತಗಳಲ್ಲಿ ವಾಹನಗಳನ್ನು ನಿಲ್ಲಿಸಿ ಗಸ್ತು ಮಾಡುವುದರಿಂದ ಅಪರಾಧಗಳನ್ನು ನಿಯಂತ್ರಿಸಬಹುದಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ವಿಶೇಷವಾಗಿ ಸಂಜೆ ಮತ್ತು ವಾರಾಂತ್ಯದ ದಿನಗಳಂದು ಸೂಕ್ಷ್ಮ ವಲಯ ಪ್ರದೇಶಗಳಾಂದತ ಪ್ರಾರ್ಥನಾ ಸ್ಥಳಗಳು, ಮಾಲ್‌ ಗಳು ಹಾಗೂ ಮಾರುಕಟ್ಟಯಂತಹ ಹೆಚ್ಚು ಜನಸಂದಣಿ ಇರುವ ಸ್ಥಳಗಳಲ್ಲಿ ಕಾಲ್ನಡಿಗೆಯಲ್ಲಿ ಪೊಲೀಸರು ಗಸ್ತು ಮಾಡಿದರೆ, ಯಾವುದೇ ರೀತಿಯ ಘರ್ಷಣೆ, ಕಾನೂನು ಬಾಹಿರ ಚಟುವಟಿಕೆಗಳು ನಡೆಯುವುದಿಲ್ಲ. ಒಂದು ವೇಳೆ ಅಂತಹ ಘಟನೆಗಳು ಸಂಭವಿಸಿದರೂ  ತಕ್ಷಣ ನಿಯಂತ್ರಿಸಲು ಸಾಧ್ಯವಾಗುತ್ತದೆ ಎಂದು ಅವರು ವಿವರಿಸಿದರು.

ಹೆಚ್ಚುವರಿ ಪೊಲೀಸ್‌ ಆಯುಕ್ತರು, ಜಂಟಿ ಪೊಲೀಸ್‌ ಆಯುಕ್ತರು ಹಾಗೂ ಎಲ್ಲಾ ಡಿಸಿಪಿಗಳ ಸಭೆ ನಡೆಸಿ, ಚರ್ಚಿಸಿ ಈ ಯೋಜನೆಯನ್ನು ಅಳವಡಿಸಿದ್ದೇವೆ ಎಂದು ಅವರು ಹೇಳಿದರು.
ಠಾಣಾಧಿಕಾರಿಗಳು ಮತ್ತು ಎಸಿಪಿ ಮಟ್ಟದ ಅಧಿಕಾರಿಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿರುವ ರೌಡಿ ಶೀಟರ್‌ ಗಳ ಬಗ್ಗೆ ನಿಗಾ ವಹಿಸಬೇಕು. ಯಾವ ಸಮಯ ಹಾಗೂ ಯಾವ ಪ್ರದೇಶಗಳಲ್ಲಿ ಹೆಚ್ಚಾಗಿ ಅಪರಾಧ ಕೃತ್ಯಗಳು ಜರುಗುತ್ತವೆ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿಯನ್ನು ಪಡೆದು, ಅಂತಹ ಪ್ರದೇಶಗಳಲ್ಲಿ ಗಸ್ತನ್ನು ಹೆಚ್ಚಿಸಬೇಕು ಎಂದು ಸೂಚನೆ ನೀಡಲಾಗಿದೆ ಎಂದು ಆಯುಕ್ತರು ತಿಳಿಸಿದರು.

More articles

Latest article