ನವದೆಹಲಿ: ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮೊಹಮ್ಮದ್ ಯೂನಸ್ ಅವರ ಸರ್ಕಾರದ ವಿರುದ್ಧ ಮಾಜಿ ಪ್ರಧಾನಿ ಶೇಖ್ ಹಸೀನಾ ವಾಗ್ದಾಳಿ ನಡೆಸಿದ್ದಾರೆ. ಭಾರತದಲ್ಲಿ ಆಶ್ರಯ ಪಡೆದಿರುವ ಅವರು ಬಾಂಗ್ಲಾದೇಶದ ಜನತೆಯನ್ನು ಉದ್ದೇಶಿಸಿ ಆಡಿಯೋ ಸಂದೇಶ ಬಿಡುಗಡೆ ಮಾಡಿದ್ದಾರೆ. ದೇಶವನ್ನು ಭಯೋತ್ಪಾದಕ ರಾಷ್ಟ್ರವನ್ನಾಗಿ ಮಾಡಿದ್ದಾರೆ. ಪ್ರಜಾಪ್ರಭುತ್ವವನ್ನು ಗಡಿಪಾರು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಅವರು ಕಾನೂನು ಬಾಹಿರ ಮತ್ತು ಹಿಂಸಾತ್ಮಕ ಆಡಳಿತ ನಡೆಸುತ್ತಿದ್ದಾರೆ. ಅವರ ದುರಾಡಳಿತದಿಂದ ತಾಯ್ನಾಡಿನ ರಕ್ತ ಸೋರುತ್ತಿದೆ. ಆದ್ದರಿಂದ ಈ ಮಧ್ಯಂತರ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಕರೆ ನೀಡಿದರು.
ಬಾಂಗ್ಲಾದೇಶದಿಂದ 2024 ರಲ್ಲಿ ಪಲಾಯನ ಮಾಡಿ ಭಾರತದಲ್ಲಿ ನೆಲೆಸಿರುವ ಹಸೀನಾ ಅವರು ಇದೇ ಮೊದಲ ಬಾರಿಗೆ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು. ದೆಹಲಿಯಲ್ಲಿ ನಡೆದ ಸಭೆಯಲ್ಲಿ ಬಾಂಗ್ಲಾದ ಜನರನ್ನ ಉದ್ದೇಶಿಸಿ ಆಡಿಯೋ ಸಂದೇಶದ ಮೂಲಕ ಮಾತನಾಡಿ, ಯೂನಸ್ ಆಡಳಿತದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಯೂನಸ್ ಒಬ್ಬ ಸರ್ವಾಧಿಕಾರಿ ಮತ್ತು ಕೊಲೆಗಡುಕ. ಅಧಿಕಾರದ ಲಾಲಸೆಯಿಂದ ಆಡಳಿತ ನಡೆಸುತ್ತಿದ್ದಾರೆ. ನನ್ನನ್ನು ಪದಚ್ಯುತಿಗೊಳಿಸಿದ ನಂತರ ಇಡೀ ದೇಶದಲ್ಲಿ ಅರಾಜಕತೆ ತಾಂಡವವಾಡುತ್ತಿದೆ. ವಿದೇಶಿ ಆಡಳಿತದ ಕೈಗೊಂಬೆಯಾಗಿ ಆಡಳಿತ ನಡೆಸುತ್ತಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.
ನನ್ನ ದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಅಲ್ಪಸಂಖ್ಯಾತರಾದ ಹಿಂದೂ, ಕ್ರೈಸ್ತರು ಮತ್ತು ಬೌದ್ಧರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗುತ್ತಿದೆ. ಇಂತಹ ಸರ್ಕಾರದ ಅವಧಿಯಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ಅಸಾಧ್ಯ ಎಂದು ಅವರು ಕಳವಳ ವ್ಯಕ್ತಪಡಿಸಿದರು.
ಇವರ ದುರಾಡಳಿತಕ್ಕೆ ಅಂತ್ಯ ಹಾಡಬೇಕು. ಪ್ರಜಾಪ್ರಭುತ್ವದ ಮರುಸ್ಥಾಪನೆಗೆ ಸಿದ್ಧರಾಗಬೇಕು. ಇದಕ್ಕಾಗಿ ದೇಶದ ಎಲ್ಲರೂ ಒಟ್ಟಾಗಬೇಕು ಎಂದು ಕರೆ ನೀಡಿದರು. ಬಾಂಗ್ಲಾದೇಶದಲ್ಲಿ ಫೆಬ್ರವರಿ 12ರಂದು ರಾಷ್ಟ್ರೀಯ ಚುನಾವಣೆ ನಡೆಯಲಿದ್ದು, ಹಸೀನಾ ಅವರ ಅವಾಮಿ ಲೀಗ್ ಪಕ್ಷ ಸ್ಪರ್ಧಿಸಲು ನಿಷೇಧ ಹೇರಲಾಗಿದೆ.

