ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಗೌತಮಪುರ ಗ್ರಾಮದಲ್ಲಿ ವಾರದ ಹಿಂದೆ ನಡೆದಿದ್ದ ಅಮಾನವೀಯ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಮನೆಯ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ ನೆರೆಹೊರೆಯವರು ಕ್ಷುಲ್ಲಕ ಕಾರಣಕ್ಕೆ 67 ವರ್ಷದ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಥಳಿಸಲಾಗಿದೆ.
ಹುಚ್ಚಮ್ಮ ಎಂಬ ವೃದ್ಧೆ, ತಮ್ಮ ಮನೆಯ ಮುಂದೆ ಪ್ರೇಮ ಎಂಬಾಕೆ ಮಹಿಳೆ ಕಸ ತಂದು ಹಾಕಿದ್ದನ್ನು ಪ್ರಶ್ನಿಸಿದ್ದರು. ಈ ಸಣ್ಣ ವಿಷಯಕ್ಕೆ ಕೋಪಗೊಂಡ ಪ್ರೇಮ, ಮಂಜುನಾಥ್ ಮತ್ತು ದರ್ಶನ್ ಎಂಬ ಇಬ್ಬರು ಯುವಕರೊಂದಿಗೆ ಆಗಮಿಸಿ ಹುಚ್ಚಮ್ಮನವರನ್ನು ನಿಂದಿಸಿ, ಮನೆಯಿಂದ ಎಳೆದುಕೊಂಡು ಹೋಗಿ ಮರಕ್ಕೆ ಹಗ್ಗದಿಂದ ಕಟ್ಟಿ ದೈಹಿಕವಾಗಿ ಹಲ್ಲೆ ಮಾಡಿದ್ದಾರೆ.
ಜೂನ್ 24 ರ ಬೆಳಗ್ಗೆ ಈ ಘಟನೆ ನಡೆದಿದ್ದರೂ, ಹಲ್ಲೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಘಟನೆಯ ಮರುದಿನವೇ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಪ್ರಕರಣ ದಾಖಲಿಸಲಾಗಿದೆ.
ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಹುಚ್ಚಮ್ಮ ಅವರ ಮಗ ಕಣ್ಣಪ್ಪ, ತನ್ನ ವೃದ್ಧ ಪೋಷಕರ ಸುರಕ್ಷತೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಪೊಲೀಸರಿಗೆ ದೂರು ನೀಡಿದ್ದಾರೆ. ತಮ್ಮ ಕುಟುಂಬಕ್ಕೆ ಭದ್ರತೆ ಒದಗಿಸುವಂತೆ ಮತ್ತು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ.