Sunday, September 8, 2024

ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ ನೀಡಬೇಕೆಂದು ಕೇಂದ್ರಕ್ಕೆ ಪತ್ರ ಬರೆಯುತ್ತೇನೆ : ಸಿದ್ದರಾಮಯ್ಯ

Most read

ಕರ್ನಾಟಕ ರತ್ನ ಶತಾಯುಷಿ ಪರಮಪೂಜ್ಯ ಡಾ.ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ ಸ್ಮರಣಾರ್ಥ ನಿರ್ಮಿಸಿರುವ “ಸ್ಮೃತಿ ವನ”ವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶ್ರೀ ಶಿವಕುಮಾರ ಮಹಾಶಿವಯೋಗಿಗಳಿಗೆ ಭಾರತ ರತ್ನ ನೀಡಬೇಕೆಂದು ಕೇಂದ್ರಕ್ಕೆ ಪತ್ರ ಬರೆಯುತ್ತೇನೆ ಎಂದರು. 12ನೇ ಶತಮಾನದಲ್ಲೇ ಬಸವಾದಿ ಶರಣರು ಜಾತಿ ರಹಿತ, ವರ್ಗ ರಹಿತ ಸಮಾನತೆಯ ಸಮಾಜ ನಿರ್ಮಾಣಕ್ಕಾಗಿ ಕ್ರಾಂತಿಯನ್ನೇ ಮಾಡಿದ್ದರು. ಮನುಷ್ಯ ಕುಲ ಇರುವವರೆಗೂ ಶಾಶ್ವತ ಆಗಿ ಉಳಿಯುವ ಸಂದೇಶ ಮತ್ತು ಮೌಲ್ಯಗಳನ್ನು ಬಿಟ್ಟು ಹೋಗಿದ್ದಾರೆ. ಈ ಮೌಲ್ಯಗಳನ್ನು ಪಾಲಿಸಿ ನಡೆಯುವುದೇ ಬಸವಾದಿ ಶರಣರಿಗೆ ನಾವು ಸಲ್ಲಿಸುವ ಗೌರವ ಎಂದರು.

ಭಾರತ ಸಂವಿಧಾನದ ಆಶಯ ಮತ್ತು ಬಸವಾದಿ ಶರಣರ ಹೋರಾಟದ ಆಶಯ ಒಂದೇ ಆಗಿದೆ. ನಮಗೆ ಸಂವಿಧಾನ ಧರ್ಮಗ್ರಂಥ ಇದ್ದ ಹಾಗೆ. ಜನರ ಬದುಕನ್ನು ಎತ್ತಿರುವುದೇ ಈ ಸಂವಿಧಾನ ಎಂಬ ಧರ್ಮಗ್ರಂಥದ ಆಶಯ. ಕಾಯಕ ಮತ್ತು ದಾಸೋಹ ಎರಡೂ ಜೀವನ ಮೌಲ್ಯಗಳು. ಈ ಮೌಲ್ಯಗಳನ್ನು ಶಿವಕುಮಾರ ಸ್ವಾಮೀಜಿಗಳು ತಮ್ಮ ಬದುಕಿನುದ್ದಕ್ಕೂ ಆಚರಿಸಿದ್ದರು‌. ಇಂದು 10 ಸಾವಿರ ಮಕ್ಕಳು ಮಠದಲ್ಲಿ ವಿದ್ಯೆ, ವಸತಿ, ಅನ್ನ ಪಡೆಯುತ್ತಿದ್ದಾರೆ ಎಂದರೆ ಶಿವಕುಮಾರ ಮಹಾಯೋಗಿಗಳ ಬದುಕಿನ ಆಚರಣೆಯೇ ಕಾರಣ ಎಂದು ಹೇಳಿದರು.

ನಂಜುಂಡಪ್ಪ ಅವರ ವರದಿಯಂತೆ ಸರ್ಕಾರ ಕೆಲಸ ಮಾಡುತ್ತಿದೆ. ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ದಕ್ಷಿಣ ಮತ್ತು ಉತ್ತರ ಕರ್ನಾಟಕ ನಡುವಿನ ಅಭಿವೃದ್ಧಿಯ ತಾರತಮ್ಯವನ್ನು ಹೋಗಲಾಡಿಸಲು ಸರ್ಕಾರ ಶ್ರಮಿಸುತ್ತಿದೆ. ಶಿಕ್ಷಣದ ಮೂಲಕ ತಾರತಮ್ಯ ಮತ್ತು ಅಸಮಾನ ಪ್ರಜ್ಞೆಯನ್ನು ಅಳಿಸಲು ಸಾಧ್ಯವಿದೆ. ಬಸವಾದಿ ಶರಣರ ತತ್ವಾದರ್ಶಗಳು ಸಮಾಜದಲ್ಲಿ ಜಾರಿ ಆದಾಗ ಮಾತ್ರ ಸಮಾನ ಅವಕಾಶಗಳು ಸೃಷ್ಟಿಯಾಗಲು ಸಾಧ್ಯ.

ಶಿವಕುಮಾರ ಸ್ವಾಮಿಗಳು ಬದುಕಿನುದ್ದಕ್ಕೂ ಅಕ್ಷರ ಸಂಸ್ಕೃತಿ ಮೂಲಕ ಸಮಾಜದಲ್ಲಿ ಕ್ರಾಂತಿಕಾರಕ‌ ಬದಲಾವಣೆ ತರಲು ಶ್ರಮಿಸಿದರು‌. ಹೀಗಾಗಿ ಶ್ರೀಗಳ ಕಾರ್ಯ, ಕಾಳಜಿ ಮತ್ತು ಅವರ ನಡೆ-ನುಡಿ ಈ ಮಣ್ಣಿನಲ್ಲಿ ಅಜರಾಮರ ಆಗಿ ಉಳಿಯಲಿದೆ ಎಂದರು.

ಬಸವಾದಿ ಶರಣರ ಆಶಯದಂತೆ ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಇದಕ್ಕಾಗಿ ವಾರ್ಷಿಕ 58 ಸಾವಿರ ಕೋಟಿ ರೂಪಾಯಿಗಳನ್ನು ನೀಡಲಾಗುತ್ತಿದೆ. ಇವೆಲ್ಲವೂ ಸಮಸಮಾಜದ ಆಶಯಗಳನ್ನು ಈಡೇರಿಸುವ ದಿಕ್ಕಿನಲ್ಲಿ ನಮ್ಮ ಸರ್ಕಾರ ಇಟ್ಟ ದಿಟ್ಟ ಹೆಜ್ಜೆಗಳಾಗಿವೆ ಎಂದು ಸಂತೋಷ ವ್ಯಕ್ತಪಡಿಸಿದರು.

More articles

Latest article