Sunday, September 8, 2024

ಅಸಮಾನತೆ ಹೋಗಲಾಡಿಸದೆ ಶೋಷಿತ ಸಮುದಾಯಗಳ ಏಳಿಗೆ ಸಾಧ್ಯವಿಲ್ಲ: ಸಿ.ಎಂ. ಸಿದ್ದರಾಮಯ್ಯ

Most read

ಜಾತಿ ವ್ಯವಸ್ಥೆ ದೇವರ ಸೃಷ್ಟಿಯಲ್ಲ. ಸ್ವಾರ್ಥಿ ಮನುಷ್ಯರ ಸೃಷ್ಟಿ. ಅಸಮಾನತೆ ಹೋಗಲಾಡಿಸದೆ ಶೋಷಿತ ಸಮುದಾಯಗಳ ಏಳಿಗೆ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಭೋವಿ ಗುರುಪೀಠದ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರ ದೀಕ್ಷಾ ರಜತ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯೆ ಕಲಿಯಲು ಅವಕಾಶ ಸಿಕ್ಕ ಕೆಲವರು ಮಾತ್ರ ಆರ್ಥಿಕವಾಗಿ ಮೇಲೆ ಬಂದರು. ವಿದ್ಯೆಯ ಅವಕಾಶ ಇಲ್ಲದವರು ಕುಲ ಕಸುಬನ್ನಷ್ಟೆ ಮಾಡಿಕೊಂಡು ಹಿಂದುಳಿದರು. ಶೋಷಿತ ಸಮುದಾಯಗಳ ವಿಮೋಚನೆಗೆ ಹೋರಾಡಿದ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಶಿಕ್ಷಣದಿಂದಲೇ ಮೇದಾವಿಯಾದರು ಎಂದು ವಿವರಿಸಿದರು.

ಶತಮಾನಗಳ ಕಾಲ ಗುಲಾಮಗಿರಿ ಇದ್ದುದರಿಂದ ತಳಸಮುದಾಯಗಳು ಹಿಂದೆ ಉಳಿದವು. ಈಗಲೂ ಶಿಕ್ಷಣದ ಕೊರತೆಯಿಂದ ಆ ಗುಲಾಮಗಿರಿ ಮನಸ್ಥಿತಿಯಿಂದ ಹೊರಗೆ ಬರಲು ಸಾಧ್ಯವಾಗಿಲ್ಲ. ಆದ್ದರಿಂದ ಸ್ವಾಭಿಮಾನ ಬೆಳೆಸಿಕೊಂಡು ಗುಲಾಮಗಿರಿ ಮನಸ್ಥಿತಿಯಿಂದ ಹೊರಗೆ ಬರಬೇಕು ಎಂದರು.

ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಶಿಕ್ಷಣ ಪಡೆಯಲು ಸಾಧ್ಯವಾಗಿಲ್ಲ. ಶಿಕ್ಷಣ ಪ್ರತಿಯೊಬ್ಬರ ಮೂಲಭೂತ ಹಕ್ಕು ಎಂದರು.

ಎಸ್ ಸಿ/ ಎಸ್ ಟಿ ಸಮುದಾಯಗಳ‌ ಜನಸಂಖ್ಯೆ ರಾಜ್ಯದಲ್ಲಿ 24% ಇದ್ದಾರೆ. ಈ ಜನಸಂಖ್ಯೆಗೆ ಸಮವಾಗಿ ಅಭಿವೃದ್ಧಿ ಆಯವ್ಯಯದ ಶೇ 24 ರಷ್ಟು ಹಣವನ್ನು ಈ ಸಮುದಾಯಗಳ ಏಳಿಗೆಗಾಗಿ ಮೀಸಲಿಟ್ಟಿದ್ದು ನಮ್ಮ ಸರ್ಕಾರ. ಭೋವಿ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿದ್ದು ನಮ್ಮ ಸರ್ಕಾರ. ಭೋವಿ ಸಮುದಾಯದ ಪ್ರತಿನಿಧಿಯನ್ನು ಕೆಪಿಎಸ್ ಸಿ ಸದಸ್ಯರನ್ನಾಗಿ ಮಾಡಿದ್ದು ನಮ್ಮ ಸರ್ಕಾರ ಎಂದರು.

ಭೋವಿ ಅಭಿವೃದ್ಧಿ ನಿಗಮವನ್ನು ಭೋವಿ-ವಡ್ಡರ ಅಭಿವೃದ್ಧಿ ನಿಮಗವಾಗಿ ಮರುನಾಮಕರಣ ಮಾಡುಬೇಕು ಎನ್ನುವ ಬೇಡಿಕೆ ಇದೆ. ಈ ಬೇಡಿಕೆಯನ್ನು ಈಡೇರಿಸಲಾಗುವುದು ಎಂದರು.

ಸಿದ್ಧರಾಮೇಶ್ವರ ಅಧ್ಯಯನ‌ಪೀಠಕ್ಕಾಗಿ ಬೇಡಿಕೆ ಇದೆ. ಈ ಬೇಡಿಕೆಯನ್ನೂ ಈಡೇರಿಸಲಾಗುವುದು ಎಂದರು.

ಸಚಿವರಾದ ಶಿವರಾಜ್ ತಂಗಡಗಿ, ಡಿ.ಸುಧಾಕರ್, ಸತೀಶ್ ಜಾರಕಿಹೊಳಿ, ಶಾಸಕರಾದ ರಘುಮೂರ್ತಿ, ವೀರೇಂದ್ರ ಪಪ್ಪಿ, ಹೆಚ್.ವಿ.ವೆಂಕಟೇಶ್, ಶ್ರೀನಿವಾಸ್, ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ರವಿಕುಮಾರ್, ಮಾಜಿ ಸಚಿವ ಅರವಿಂದ ಲಿಂಬಾವಳಿ, ಮಾಜಿ ಸಂಸದರಾದ ಚಂದ್ರಣ್ಣ ಸೇರಿ ಹಲವು ಮಂದಿ ಸಮಾಜದ ಮುಖಂಡರು ಮತ್ತು ಸಮುದಾಯದ ಶ್ರೀಗಳು ಹಾಗೂ ನಾನಾ ಸಮುದಾಯಗಳ ಮುಖಂಡರು ಉಪಸ್ಥಿತರಿದ್ದರು.

More articles

Latest article