ಬೆಂಗಳೂರು: 2025-26ನೇ ಸಾಲಿನ ಮಾರ್ಚ್ 7ರಂದು ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಹೊಸ ವರ್ಷದ ಮೊದಲ ಅಧಿವೇಶನ ಮಾರ್ಚ್ 3ರಂದು ಆರಂಭವಾಗಲಿದೆ.
ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ಮೊದಲ ದಿನ ರಾಜ್ಯಪಾಲರು ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡಲಿದ್ದಾರೆ. ನಂತರ ಅವರ ಭಾಷಣದ ಮೇಲೆ ಚರ್ಚೆ ನಡೆಯಲಿದೆ ಎಂದರು. ಎಷ್ಟು ದಿವಸ ಅಧಿವೇಶನ ನಡೆಸಬೇಕು ಎನ್ನುವುದನ್ನು ಸದನ ಕಲಾಪ ಸಲಹಾ ಸಮಿತಿ ನಿರ್ಧಾರ ಮಾಡಲಿದೆ ಎಂದರು.
ನನಗೆ ಕಾಲು ನೋವು ಇದ್ದರೂ ಮನೆಯಲ್ಲಿ ಕುಳಿತು ಇಲಾಖೆಗಳ ಸಭೆ ನಡೆಸಿದ್ದೇನೆ. ಇಂದು ರೈತ ಮುಖಂಡರ ಸಭೆ ಮಾಡಿದ್ದೇನೆ. ಬಜೆಟ್ ಮಾಡುವಾಗ ನಮ್ಮ ಇತಿಮಿತಿಯಲ್ಲಿ ಏನು ಸೇರಿಸಬೇಕು ಎಂಬ ಬಗ್ಗೆ ಚರ್ಚೆ ನಡೆದಿದೆ. ನಮ್ಮ ಸರ್ಕಾರ ರೈತರ ಹಿತ ಕಾಪಾಡುವಲ್ಲಿ ಹಿಂದೆ ಬಿದ್ದಿಲ್ಲ. ಕೃಷಿಕರಿಗೆ ಪೂರಕವಾಗಿ ಇರುತ್ತೇನೆ ಎಂಬ ಮಾತು ಕೊಡುತ್ತೇನೆ. ಬೆಲೆ ಏರಿಕೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಎರಡೂ ಮಾಡಬೇಕು. ರಾಜ್ಯ ಸರ್ಕಾರದ ಕಡೆಯಿಂದ ಬೆಲೆ ಏರಿಕೆ ನಿಯಂತ್ರಿಸಲು ಏನು ಮಾಡಬೇಕೊ ಅದನ್ನು ಮಾಡುತ್ತೇವೆ. ಕೇಂದ್ರ ಸರ್ಕಾರ ಕೂಡಾ ಬೆಲೆ ಏರಿಕೆ ಬಗ್ಗೆ ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕು ಎಂದರು.