ಬೆಂಗಳೂರು : ಕಾವೇರಿ ಕಲ್ಲು ಕ್ರಷರ್ನಲ್ಲಿ ಬಂಡೆ ಕುಸಿದು ರಾಜದಯದ ಇಬ್ಬರು ಕಾರ್ಮಿಕರು ಸೇರಿದಂತೆ ಬಿಹಾರ ಮೂಲದ 7 ಕಾರ್ಮಿಕರು ದುರಂತ ಸಾವಿಗೀಡಾಗಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಮಾದಾಪಟ್ಟಣ ಬಳಿ ನಡೆದಿದೆ.
ಬೆಂಗಳೂರು ದಕ್ಷಿಣ ತಾಲೂಕಿನ ಕಾವೇರಿ ಕ್ರಷರ್ನಲ್ಲಿ ಬೆಳಗ್ಗೆ 5 ಗಂಟೆಗೆ ಕೆಲಸ ಮಾಡುತ್ತಿದ್ದಾಗ ಸುಮಾರು 40 ಅಡಿ ಎತ್ತರದಿಂದ ಬೃಹತ್ ಬಂಡೆ ಕಲ್ಲು ಕೂಲಿ ಕಾರ್ಮಿಕರ ಮೇಲೆ ಉರುಳಿ ಬಿದ್ದಿದೆ. ಸುಮಾರು 15 ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಐವರಿಗೆ ಗಾಯಗಳಾಗಿದ್ದು, ಆಸ್ಪತ್ರಗೆ ಕರೆದುಕೊಂಡು ಹೋಗಲಾಗಿದೆ. ಇದುವರೆಗೂ ನಾಲ್ವರ ಮೃತದೇಹವನ್ನು ಹೊರತೆಗೆಯಲಾಗಿದೆ.
ಸ್ಥಳಕ್ಕೆ ತಾವರೆಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಲಾಗಿದೆ.
ಪರಿಹಾರಕ್ಕೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ
ದುರಂತದಲ್ಲಿ ಮೃತರಾದವರ ಕುಟುಂಬಕ್ಕೆ ರಾಜ್ಯ ಸರ್ಕಾರ ಪರಿಹಾರ ಕೊಡಬೇಕು ಅಂತ ಕೇಂದ್ರ ಸಚಿವ ಕುಮಾರಸ್ವಾಮಿ ಸರ್ಕಾರವನ್ನು ಒತ್ತಾಯಿಸಿದ್ದಾರೆ. Xನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣದಲ್ಲಿ ಕಲ್ಲು ಕ್ವಾರಿಯ ಬಂಡೆ ಕುಸಿದು ಏಳು ಜನ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನನಗೆ ಅತೀವ ನೋವುಂಟು ಮಾಡಿದೆ. ಮೃತಪಟ್ಟ ಕಾರ್ಮಿಕರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ ಹಾಗೂ ಗಾಯಗೊಂಡವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬರೆದಿದ್ದಾರೆ.

