ನವದೆಹಲಿ: ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಸಮಸ್ಯೆಗಳ ಪರಿಹಾರಕ್ಕಾಗಿ ಮತ್ತು ಆತ್ಮಹತ್ಯೆ ತಡೆಗಾಗಿ ರಾಷ್ಟ್ರೀಯ ಕಾರ್ಯಪಡೆಯನ್ನು (ಎನ್ ಟಿ ಎಫ್) ಸುಪ್ರೀಂಕೋರ್ಟ್ ರಚಿಸಿದೆ. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪದೇ ಪದೇ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ನ್ಯಾಯಾಲಯ ಈ ನಿರ್ಧಾರ ಕೈಗೊಂಡಿದೆ.
ನ್ಯಾಯಮೂರ್ತಿ ಜೆ.ಬಿ.ಪಾರ್ದೀವಾಲಾ ಮತ್ತು ಆರ್.ಮಹದೇವನ್ ಅವರನ್ನು ಒಳಗೊಂಡ ನ್ಯಾಯಪೀಠವು, ಐಐಟಿ ದೆಹಲಿಯಲ್ಲಿ ಓದುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಕಳೆದ ವರ್ಷ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಪೋಷಕರು ನೀಡಿದ ದೂರಿನ ಆಧಾರದಲ್ಲಿ ಎಫ್ಐಆರ್ ದಾಖಲಿಸಬೇಕೆಂದು ದೆಹಲಿ ಪೊಲೀಸರಿಗೆ ಸೂಚಿಸಿತು.
ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಸ್.ರವೀಂದ್ರ ಭಟ್ ಅವರು ಎನ್ ಟಿ ಎಫ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ವಿದ್ಯಾರ್ಥಿಗಳ ಆತ್ಮಹತ್ಯೆಗೆ ಕಾರಣವಾಗುವ ಅಂಶಗಳು, ಚಾಲ್ತಿಯಲ್ಲಿರುವ ನಿಯಮಗಳು ಮತ್ತಿತರ ಅಂಶಗಳ ಬಗ್ಗೆ ಎನ್ಟಿಎಫ್ ವರದಿ ನೀಡಲಿದೆ ಎಂದು ಎಂದು ನ್ಯಾಯಾಲಯ ತನ್ನ ಆದೇಶದಲ್ಲಿ ತಿಳಿಸಿದೆ.
ವರದಿ ತಯಾರಿಕೆ ಸಂದರ್ಭದಲ್ಲಿ ಎನ್ ಟಿ ಎಫ್ ಯಾವುದೇ ಉನ್ನತ ಶಿಕ್ಷಣ ಸಂಸ್ಥೆಗೆ ಪರಿಶೀಲನೆಗಾಗಿ ದಿಢೀರ್ ಭೇಟಿ ನೀಡುವ ಅಧಿಕಾರವನ್ನು ಹೊಂದಿರುತ್ತದೆ. ಎನ್ಟಿಎಫ್ ತನ್ನ ಮಧ್ಯಂತರ ವರದಿಯನ್ನು ಒಂದು ತಿಂಗಳ ಒಳಗಾಗಿ ಸಲ್ಲಿಸಬೇಕಿರುತ್ತದೆ. ಅಂತಿಮ ವರದಿಯನ್ನು ಎಂಟು ತಿಂಗಳ ಒಳಗಾಗಿ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ.