ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ವಿಧಾನ ಪರಿಷತ್ ಉಪ ಚುನಾವಣೆ: ಶೇ 97.91ಮತದಾನ

Most read

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ವ್ಯಾಪ್ತಿಯ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಸದಸ್ಯರ ಆಯ್ಕೆಗಾಗಿ ನಡೆದ ಉಪ ಚುನಾವಣೆಯಲ್ಲಿ ಶೇ. 97.91ರಷ್ಟು ಮತದಾನವಾಗಿದೆ.

ಕೋಟಾ ಶ್ರೀನಿವಾಸ ಪೂಜಾರಿ ಅವರು ಲೋಕಸಭೆಗೆ ಆಯ್ಕೆಯಾಗಿದ್ದು, ಅವರ ರಾಜೀನಾಮೆಯಿಂದ ಈ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿತ್ತು.‌ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು ಮತ್ತು ಕಾಂಗ್ರೆಸ್ ನಿಂದ ರಾಜು ಪೂಜಾರಿ ಸ್ಪರ್ಧಿಸಿದ್ದಾರೆ.


ಈ ಉಪಚುನಾವಣೆಯಲ್ಲಿ ಎರಡೂ ಜಿಲ್ಲೆಗಳ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆ, ವಿಧಾನ ಸಭೆ, ವಿಧಾನ ಪರಿಷತ್ ಹಾಗೂ ಲೋಕಸಭಾ ಸದಸ್ಯರು ಸೇರಿ 6,032 ಮತದಾರರಿದ್ದರು. ಅವರಲ್ಲಿ 5,906 ಮಂದಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಪಶ್ಚಿಮ ಘಟ್ಟ ಸಂರಕ್ಷಣೆಗಾಗಿ ಕಸ್ತೂರಿರಂಗನ್ ವರದಿಯ ಶಿಫಾರಸುಗಳ ಜಾರಿಯನ್ನು ವಿರೋಧಿಸಿ ಉಡುಪಿ ಜಿಲ್ಲೆಯ ಏಳು ಗ್ರಾಮ ಪಂಚಾಯಿತಿಗಳ ಸದಸ್ಯರು ಮತದಾನ ಬಹಿಷ್ಕರಿಸುವುದಾಗಿ ಘೋಷಿಸಿದ್ದರು. ನಂತರ ಉಡುಪಿ ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿ ಜಿ.ಎಸ್. ಮಮತಾದೇವಿ ಮತ್ತು ಕುಂದಾಪುರ ಉಪವಿಭಾಗಾಧಿಕಾರಿ ಮಹೇಶ್ಚಂದ್ರ ಅವರು ಈ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಸದಸ್ಯ ಮತದಾರರ ಮನವೊಲಿಸುವ ಪ್ರಯತ್ನ ಮಾಡಿದ್ದರು. ಈ ಏಳು ಗ್ರಾಮ ಪಂಚಾಯಿತಿಗಳ ಪೈಕಿ ಬೈಂದೂರು ತಾಲ್ಲೂಕಿನ ಜಟ್ಕಲ್‌ನಲ್ಲಿ ಎಲ್ಲ 18 ಸದಸ್ಯರೂ ಮತದಾನವನ್ನು ಬಹಿಷ್ಕರಿಸಿದ್ಧರು.

ಉಳಿದಂತೆ ಜಟ್ಕಲ್, ಯಡಮೊಗೆ, ಚಿತ್ತೂರು, ಯಡೂರು- ಕುಂಞಾಡಿ, ಆಲೂರು ಮತ್ತು ಕೆರಾಡಿ ಗ್ರಾಮಗಳ ಮತದಾರರಲ್ಲಿ ಕೆಲವರು ಹಕ್ಕು ಚಲಾಯಿಸಲಿಲ್ಲ ಎಂದು ತಿಳಿದು ಬಂದಿದೆ. ಕೆಲವು ಗ್ರಾಮ ಪಂಚಾಯಿತಿ ಸದಸ್ಯರು ಮತದಾನವನ್ನು ಬಹಿಷ್ಕರಿಸಿದ್ದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲ್ಲ ನಗರ ಸ್ಥಳೀಯ
ಸಂಸ್ಥೆಗಳಲ್ಲೂ ಮತದಾನ ಶಾಂತಿಯುತವಾಗಿ ನಡೆದಿದೆ. ಕೆಲವು ಮತಗಟ್ಟೆಗಳಲ್ಲಿ ಮಧ್ಯಾಹ್ನ 1 ಗಂಟೆಯ ಒಳಗೆ ಶೇ. ನೂರರಷ್ಟು ಮತದಾನವಾಗಿತ್ತು.

More articles

Latest article