ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ನೀಡಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ: ಸಿಎಂ ಸಿದ್ದರಾಮಯ್ಯ ಭರವಸೆ

Most read

ತುಮಕೂರು: ತುಮಕೂರು ಜಿಲ್ಲೆಯ ಕ್ರೀಡಾಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಲಾಗುವುದು ಎಂದು ಭರವಸೆ ನೀಡಿ, ತುಮಕೂರಿನಿಂದ ವಿಶ್ವಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರೀಡಾಪಟುಗಳಿಗೆ ಶುಭಕೋರಿದರು.

ಅವರು ಇಂದು ಯುವ ಸಬಲೀಕರಣ  ಮತ್ತು ಕ್ರೀಡಾ ಇಲಾಖೆ ಕರ್ನಾಟಕ ಒಲಂಪಿಕ್ ಸಂಸ್ಥೆ ಹಾಗೂ ಜಿಲ್ಲಾಡಳಿತ ತುಮಕೂರು ಜಿಲ್ಲೆ ಇವರ ವತಿಯಿಂದ ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ಕ್ರೀಡಾಕೂಟ -2025 -2026  ಕ್ರೀಡಾಕೂಟ ವನ್ನು ಉದ್ಘಾಟನೆ ಮಾಡಿ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು

ಕ್ರೀಡೆಯಿಂದ ಶಿಸ್ತು, ಸಂಯಮ, ಸಮಯಪ್ರಜ್ಞೆ ಪಾಲನೆಗೆ ಸಹಕಾರಿ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕ್ರೀಡಾಕೂಟ ನಡೆಯುತ್ತಿದ್ದು, ಇದರ ರೂವಾರಿಯಾಗಿರುವ ಗೃಹ ಸಚಿವ ಜಿ.ಪರಮೇಶ್ವರ್ ಅವರಿಗೆ ಮುಖ್ಯಮಂತ್ರಿಗಳು ಅಭಿನಂದಿಸಿದರು. ತಾನು ವಿದ್ಯಾರ್ಥಿದೆಸೆಯಲ್ಲಿ ಕಬ್ಬಡ್ಡಿ ಪಟುವಾಗಿದ್ದರು ಎಂಬುದನ್ನು ಸ್ಮರಿಸಿದ ಮುಖ್ಯಮಂತ್ರಿಗಳು, ಅದರೊಂದಿಗೆ ಫುಟ್ ಬಾಲ್, ಕ್ರಿಕೆಟ್ ಕ್ರೀಡೆಯಲ್ಲಿಯೂ ಆಸಕ್ತಿ ಹೊಂದಿದ್ದು, ಏಕದಿನ ಕ್ರಿಕೆಟ್,ಟಿ.-20 ಕ್ರಿಕೆಟ್ ವೀಕ್ಷಿಸುವ ಹವ್ಯಾಸವಿರುವ ಬಗ್ಗೆ ತಿಳಿಸಿದರು. ತನ್ನ ಕೆಲಸದೊತ್ತಡದ ನಡುವೆಯೂ ಅಂತರರಾಷ್ಟ್ರೀಯ ಫುಟ್ಬಾಲ್ ಪಂದ್ಯಗಳನ್ನು ವೀಕ್ಷಿಸುವುದನ್ನು ತಪ್ಪಿಸುವುದಿಲ್ಲವೆಂದು ತಿಳಿಸಿದರು.

ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ, ಕ್ರೀಡಾಸ್ಪೂರ್ತಿ ಮುಖ್ಯ.ಪ್ರತಿ ಕ್ರೀಡಾಪಟುವು ಇದನ್ನು ಪಾಲಿಸಬೇಕು. ಕ್ರೀಡಾಪಟುಗಳಿಗೆ ಉತ್ತಮ ಭವಿಷ್ಯವಿದ್ದು, ಕಠಿಣ ಶ್ರಮ ಅತ್ಯಗತ್ಯ. ಪರಿಶ್ರಮದಿಂದ ಗುರಿ ಸಾಧಿಸಲು ಉತ್ತಮ ತರಬೇತಿ ಅಗತ್ಯ. ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿಯ ನಿಯಮವನ್ನು ಜಾರಿಗೊಳಿಸಿದೆ. ಪೊಲೀಸ್ ಇಲಾಖೆಯಲ್ಲಿ ಪೇದೆ ಹುದ್ದೆಯಿಂದ ಆರಕ್ಷಕ ಉಪಾಧೀಕ್ಷಕರ ಹುದ್ದೆಯ ವರೆಗೆ ಶೇ.3 ರಷ್ಟು ಮೀಸಲಾತಿಯನ್ನು ಸರ್ಕಾರ ನೀಡುತ್ತಿದೆ. ಒಲಂಪಿಕ್ಸ್ , ಪಾರಾ ಒಲಂಪಿಕ್ಸ್ , ಏಷಿಯನ್ ಗೇಮ್ಸ್, ಕಾಮನ್ ವೆಲ್ತ್ ಗೇಮ್ಸ್, ರಾಷ್ಟ್ರೀಯ,ಅಂತರರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ವಿಜೇತರಾದ/ಭಾಗವಹಿಸುವ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ನೀಡಲಾಗುತ್ತಿದೆ. ವಿವಿಧ ಇಲಾಖೆಗಳಲ್ಲಿ ಶೇ.2 ರ ಮೀಸಲಾತಿಯನ್ನು ನೀಡಲಾಗುತ್ತಿದೆ. ಒಲಂಪಿಕ್ಸ್ ನಲ್ಲಿ ಪದಕ ವಿಜೇತ ಕ್ರೀಡಾಪಟುಗಳಿಗೆ ನಗದು ಬಹುಮಾನ ನೀಡುವ ಮೂಲಕ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲಾಗುತ್ತಿದೆ ಎಂದರು.

ತುಮಕೂರು ಜಿಲ್ಲೆಗೆ ಹಾಕಿ ಕ್ರೀಡಾಂಗಣ, ವಿಶ್ವದರ್ಜೆಯ ಈಜುಕೊಳದ ಬೇಡಿಕೆಯಿದ್ದು, ಕ್ರೀಡೆಗಾಗಿ ಹೆಚ್ಚಿನ ಅನುದಾನ ನೀಡುವ ಭರವಸೆಯನ್ನು ನೀಡಿದರು. ತುಮಕೂರು ಜಿಲ್ಲೆಯಿಂದ ಉತ್ತಮ ಕ್ರೀಡಾಪಟುಗಳು ಹೊರಬಂದು, ವಿಶ್ವಮಟ್ಟದಲ್ಲಿ ನಾಡಿನ ಕೀರ್ತಿಯನ್ನು ಹೆಚ್ಚಿಸಲೆಂದ ಕ್ರೀಡಾಪುಟಗಳಿಗೆ ಮುಖ್ಯಮಂತ್ರಿಗಳು ಶುಭ ಕೋರಿದರು.

ಗೃಹ ಸಚಿವ ಜಿ.ಪರಮೇಶ್ವರ್, ಮಾಜಿ ಸಚಿವ ಶಾಸಕ ಕೆ.ಎನ್.ರಾಜಣ್ಣ, ವಿಧಾನಸಭೆ ಮುಖ್ಯ ಸಚೇತಕ ಅಶೋಕ್ ಪಟ್ಟಣ್, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ,  ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಗೋವಿಂದರಾಜು, ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ಮತ್ತು ಜಿಲ್ಲೆಯ ಶಾಸಕರುಗಳು ಸೇರಿ ಹಲವು ಮಂದಿ ಪ್ರಮುಖರು ವೇದಿಕೆಯಲ್ಲಿದ್ದರು.

More articles

Latest article